ಆನೇಕಲ್: ಚಾಲಕನ ನಿಯಂತ್ರಣ ತಪ್ಪಿದ್ದ ಕಾರು ಮುಂದೆ ಹೋಗುತ್ತಿದ್ದ ಕಂಟೈನರ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇನೋವಾ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.
ಬುಧವಾರ ತಾಲ್ಲೂಕಿನ ಯಡವನಹಳ್ಳಿ ಬಳಿ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ ವಿಜಯನಗರದ ನಿವಾಸಿಗಳಾದ ಮುಫ್ತಿಯಾರ್(30) ಮತ್ತು ಅಬ್ದುಲ್ರೆಹಮಾನ್(45) ಎಂದು ಗುರುತಿಸಲಾಗಿದೆ.
ತಮಿಳುನಾಡಿಗೆ ಹೋಗಿ ವಾಪಸ್ ಬೆಂಗಳೂರಿಗೆ ಬರುತ್ತಿದ್ದಾಗ ಮುಂಜಾನೆ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ತಮಿಳುನಾಡಿನ ಹೊಸೂರಿನಿಂದ ಬೆಂಗಳೂರಿನತ್ತ ಇನೋವಾ ಕಾರಿನಲ್ಲಿ ಬರುತ್ತಿದ್ದರು. ಯಡವನಹಳ್ಳಿ ಗೇಟ್ ಬಳಿ ಬಂದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ಮುಂದೆ ಹೋಗುತ್ತಿದ್ದ ಕಂಟೈನರ್ ಲಾರಿಗೆ ಹಿಂದಿನಿಂದ ಡಿಕ್ಕಿಹೊಡೆದಿದೆ.
ಸ್ಥಳಕ್ಕೆ ಭೇಟಿ ನೀಡಿದ್ದ ಅತ್ತಿಬೆಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.