ಬಿಜೆಪಿ ಲೋಕಸಭಾ ಸದಸ್ಯರಾದ ಯೋಗಿ ಆದಿತ್ಯನಾಥ್ ಮತ್ತು ಕೇಶವಪ್ರಸಾದ್ ಮೌರ್ಯ ಅವರು ಕಳೆದ ಮಾರ್ಚ್ ತಿಂಗಳಿನಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದರು. ಹೀಗಾಗಿ ಈ ಇಬ್ಬರು ಮುಂಬರುವ ಸೆಪ್ಟಂಬರ್ 19ರ ಒಳಗಾಗಿ ಉತ್ತರಪ್ರದೇಶದ ವಿಧಾನಸಭೆಗೆ ಇಲ್ಲವೇ ವಿಧಾನಪರಿಷತ್ತಿಗೆ ಆಯ್ಕೆಯಾಗಬೇಕಿದೆ. ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆಯನ್ನೂ ನೀಡಬೇಕಿದೆ. ಇವರಿಬ್ಬರು ಅನುಕ್ರಮವಾಗಿ ಪ್ರತಿನಿಧಿಸುತ್ತಿದ್ದ ಗೋರಖಪುರ್ ಮತ್ತು ಫೂಲ್ಪುರ್ ಲೋಕಸಭಾ ಕ್ಷೇತ್ರಗಳಿಗೆ ಉಪಚುನಾವಣೆಗಳು ನಡೆಯಲಿವೆ.