ಹನೂರು: ‘ಲೋಕಸಭೆ ಹಾಗೂ ವಿಧಾನಸಭೆಯ ಅಧಿಕಾರವನ್ನು ಗ್ರಾಮಪಂಚಾಯಿತಿ ಮಟ್ಟದವರೆಗೂ ತಂದು ಅಧಿಕಾರ ವಿಕೇಂದ್ರೀಕರಣಗೊಳಿಸಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ’ ಎಂದು ರಾಜೀವ್ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಜ್ಯ ಸಂಚಾಲಕ ಬಿ.ಎಂ. ಸಂದೀಪ್ ಹೇಳಿದರು. ಪಟ್ಟಣದ ಸಮೀಪದ ಶಾಗ್ಯಾ ಗ್ರಾಮದಲ್ಲಿ ಮಂಗಳವಾರ ಸಂಘಟನೆಯಿಂದ ಹಮ್ಮಿಕೊಂಡಿದ್ದ ಸಂವಾದದಲ್ಲಿ ಅವರು ಮಾತನಾಡಿದರು.
ದೇಶದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಗೆ ಮತ್ತು ಮೀಸಲಾತಿಗೆ ಕಾಂಗ್ರೆಸ್ ಕೊಡುಗೆ ಅನನ್ಯವಾದುದು. ರಾಜ್ಯದಲ್ಲಿ ಜಾರಿಗೊಳಿಸಿರುವ ಹಲವು ಜನಪ್ರಿಯ ಕಾರ್ಯಕ್ರಮಗಳ ಬಗ್ಗೆ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಸಂವಾದ ಮಾಡಲು ತೀರ್ಮಾನಿಸಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ 6,023 ಗ್ರಾಮ ಪಂಚಾಯಿಗಳಲ್ಲೂ ಇಂತಹ ಸಂವಾದ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು.
ರಾಮಾ ಜೋಯಿಸ್ ಮಾತನಾಡಿ, ಆರ್ಎಸ್ಎಸ್ ವರಿಷ್ಠ ಮೋಹನ್ ಭಾಗವತ್ ಪದೇ ಪದೇ ಮೀಸಲಾತಿ ಬಗ್ಗೆ ಮಾತನಾಡುತ್ತಿರುವುದನ್ನು ನೋಡಿದರೆ ಬಿಜೆಪಿಯವರು ದಲಿತರಿಗೆ ಹಾಗೂ ಮಹಿಳೆಯರಿಗೆ ಮೀಸಲಾತಿ ರದ್ದು ಮಾಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ ಎಂದು ಆರೋಪಿಸಿದರು.
ಮುಖಂಡ ಎಂ.ಜಿ. ರಂಗಸ್ವಾಮಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ರಾಮ ಪಂಚಾಯಿತಿ ಮತ್ತು ಗ್ರಾಮ ಸಭೆಗಳಿಗೆ ಶಕ್ತಿ ತುಂಬಲು ರಮೇಶ್ಕುಮಾರ್ ನೇತೃತ್ವದಲ್ಲಿ ಸಮಿತಿ ರಚಿಸಿ ಅವರ ವರದಿಯ ಸಹಕಾರದಿಂದ ಗ್ರಾಮಸಭೆಗೆ ಇನ್ನಷ್ಟು ಶಕ್ತಿ ತುಂಬುವ ಕೆಲಸವಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಸಂಯೋಜಕ ಜವಾದ್, ಜಿಲ್ಲಾ ಪಂಚಾಯಿತಿ ಸದಸ್ಯೆ ಲೇಖಾ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ರಾಜು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಜರಿದ್ದರು.