ಗುಂಡ್ಲುಪೇಟೆ: ‘ಸಂವಿಧಾನ ಒದಗಿಸಿರುವ ಹಕ್ಕು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ’ ಎಂದು ಪ್ರಧಾನ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಜೆ. ಯೋಗೇಶ್ ಹೇಳಿದರು. ಪಟ್ಟಣದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಶುಕ್ರವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸಮಷ್ಟಿ ಸಮಗ್ರ ಅಭಿವೃದ್ಧಿ ಟ್ರಸ್ಟ್ನಿಂದ ನಡೆದ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳ ಕುರಿತ ಕಾನೂನು ಅರಿವು, ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜನಸಾಮಾನ್ಯರಿಗೆ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳ ತಿಳಿವಳಿಕೆ ಅವಶ್ಯಕ. ಇವೆರಡಕ್ಕೂ ಒಂದೇ ಮೌಲ್ಯವನ್ನು ನೀಡಿ ಕಾಪಾಡಿಕೊಳ್ಳಬೇಕು ಎಂದ ಅವರು, ಎಲ್ಲರೂ ಸಂವಿಧಾನವನ್ನು ಗೌರವಿಸಬೇಕು ಎಂದು ತಿಳಿಸಿದರು.
ಅಪರ ಸಿವಿಲ್ ಹಾಗೂ ಜೆಎಂಎಫ್ಸಿ ನ್ಯಾಯಾಧೀಶ ಎನ್. ಶರತ್ಚಂದ್ರ ಮಾತನಾಡಿ, ಸಮಾಜ ನಮಗೇನು ಮಾಡಿದೆ ಎನ್ನುವುದಕ್ಕಿಂತ ಸಮಾಜಕ್ಕೆ ನಾವೇನು ಕೊಟ್ಟಿದ್ದೇವೆ ಎನ್ನುವುದನ್ನು ಪ್ರತಿಯೊಬ್ಬರು ತಿಳಿಯಬೇಕು ಎಂದರು. ಮುಖ್ಯ ಶಿಕ್ಷಕಿ ಎಂ. ಸುಕನ್ಯಾ ಮಾತನಾಡಿ, ವಿದ್ಯಾರ್ಥಿಗಳು ಕಾನೂನಿನ ಬಗ್ಗೆ ಅರಿತು ಅದನ್ನು ಪಾಲಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಜಿ.ಬಿ. ನಂಜಪ್ಪ, ಹಿರಿಯ ವಕೀಲ ಬಿ. ಶಿವಣ್ಣ, ಸಮಷ್ಟಿ ಸಮಗ್ರ ಅಭಿವೃದ್ಧಿ ಟ್ರಸ್ಟ್ನ ಕಾರ್ಯನಿರ್ವಾಹಣಾಧಿಕಾರಿ ಗಂಗಾಧರಸ್ವಾಮಿ, ಸಂಪನ್ಮೂಲ ವ್ಯಕ್ತಿಗಳಾದ ವಕೀಲ ಜಿ. ಗಿರೀಶ್, ಎಂ. ಬೀರೇಗೌಡ ಹಾಜರಿದ್ದರು.