ಬ್ಯಾಡಗಿ: ವಿದ್ಯಾರ್ಥಿಗಳ ಮಾನಸಿಕ ವಿಕಾಸಕ್ಕೆ ಕ್ರೀಡೆ ಅತ್ಯವಶ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಪ್ರಾಮುಖ್ಯ ನೀಡುವುದು ಅಗತ್ಯ ಎಂದು ನಿವೃತ್ತ ಎಂಜಿನಿಯರ್ ಸಿ.ಆರ್.ಬಳ್ಳಾರಿ ಹೇಳಿದರು.
ತಾಲ್ಲೂಕಿನ ಮೋಟೆಬೆನ್ನೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಗುಂಡು ಎಸೆಯುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಯಾವುದೇ ಜಗಳಕ್ಕೆ ಆಸ್ಪದ ನೀಡದೆ ಕ್ರೀಡಾ ಮನೋಭಾವನೆಯಿಂದ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಸಲಹೆ ನೀಡಿದರು.
ಕ್ರೀಡಾಪಟುಗಳಿಗೆ ನಿರಂತರ ತರಬೇತಿ ನೀಡಿದ್ದಲ್ಲಿ ರಾಷ್ಟ್ರ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗಲಿದೆ. ಹೀಗಾಗಿ ಕ್ರೀಡಾ ತರಬೇತಿ ಶಾಲೆ ಆರಂಭಿಸಬೇಕಾಗಿದೆ ಎಂದು ಹೇಳಿದರು.
ಕಾರ್ಯಕ್ರಮವನ್ನು ಭೂ ದಾನಿ ಚನ್ನವೀರಪ್ಪ ಬಳ್ಳಾರಿ ಉದ್ಘಾಟಿಸಿದರು. ಒಲಿಂಪಿಕ್ ಧ್ವಜಾರೋಹಣವನ್ನು ಜಿಲ್ಲಾ ಪಂಚಾಯ್ತಿ ಸದಸ್ಯೆ ಅನುಸೂಯಾ ಕುಳೇನೂರ ನೆರವೇರಿಸಿದರು. ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಸವಿತಾ ಸುತ್ತಕೋಟಿ ಕ್ರೀಡಾ ಜ್ಯೋತಿ ಬೆಳಗಿಸಿದರು.