ಪಾವಗಡ: ‘ತಾಲ್ಲೂಕಿಗೆ ತುಂಗ ಭದ್ರಾ ನದಿಯಿಂದ ನೀರು ಪೂರೈಸುವ ಯೋಜನೆಗೆ ಚಾಲನೆ ನೀಡಲಾಗುವುದು, ಧರಣಿ ನಿಲ್ಲಿಸಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಲ್ಲೂಕು ರೈತ ಸಂಘದ ಅಧ್ಯಕ್ಷ ನರಸಿಂಹರೆಡ್ಡಿ ಅವರಿಗೆ ದೂರವಾಣಿ ಕರೆ ಮೂಲಕ ಗುರುವಾರ ತಿಳಿಸಿದ್ದಾರೆ. ತಾಲ್ಲೂಕಿಗೆ ಕುಡಿಯುವ ನೀರು ಪೂರೈಸುವ ವಿಚಾರಕ್ಕೆ ಬೆಂಗಳೂರಿನಲ್ಲಿ ಗುರುವಾರ ಸಭೆ ಕರೆಯಲಾಗಿತ್ತು.
ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಸತತ 31 ದಿನಗಳಿಂದ ನಡೆಸುತ್ತಿರುವ ಧರಣಿ ಹಿಂಪಡೆಯಬೇಕು. ತುಂಗಭದ್ರಾ ನದಿಯಿಂದ ಚಳ್ಳಕೆರೆ, ಮೊಣಕಾಲ್ಮೂರು, ಪಾವಗಡಕ್ಕೆ ಕುಡಿಯುವ ನೀರು ಪೂರೈಸುವ ಯೋಜನೆಗೆ ಅನುಮೋದನೆ ನೀಡಲಾಗುವುದು’ ಎಂದು ದೂರವಾಣಿ ಮೂಲಕ ತಿಳಿಸಿದ್ದಾರೆ.
ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ತಾಲ್ಲೂಕು ರೈತ ಸಂಘದ ಅಧ್ಯಕ್ಷ ನರಸಿಂಹರೆಡ್ಡಿ, ‘ಶುಕ್ರವಾರ ಜನ ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆ ಕರೆದು ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದರು.
ಬೇಕರಿ ಮಾಲೀಕರು ಗುರುವಾರ 31ನೇ ದಿನದ ಧರಣಿಗೆ ಬೆಂಬಲ ಸೂಚಿಸಿ ಪ್ರತಿಭಟನಾ ಮೆರವಣಿಗೆ, ರಸ್ತೆ ತಡೆ ನಡೆಸಿದರು. ಉಪವಿಭಾಗಾಧಿಕಾರಿ ವೆಂಕಟೇಶಯ್ಯ ಅವರಿಗೆ ಬೇಡಿಕೆ ಈಡೇರಿಸುವಂತೆ ಮನವಿ ಸಲ್ಲಿಸಿದರು.