ಶಹಾಪುರ: ‘ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ಅಗತ್ಯ ಸಲಕರಣೆಗಳು ಸಿಗುತ್ತಿಲ್ಲ. ಕ್ರಿಮಿನಾಶಕ ನಾಪತ್ತೆಯಾಗಿದೆ. ಕೃಷಿ ಸಾಮಗ್ರಿಗಳು ಉಳ್ಳವರ ಪಾಲು ಆಗುತ್ತಿವೆ’ ಎಂದು ಆರೋಪಿಸಿ ಬುಧವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು ಸಹಾಯಕ ಕೃಷಿ ನಿರ್ದೇಶಕ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
‘ ಗ್ರಾಮೀಣ ಪ್ರದೇಶದ ರಸಗೊಬ್ಬರ ಅಂಗಡಿಯಲ್ಲಿ ದುಬಾರಿ ಬೆಲೆಗೆ ರಸಗೊಬ್ಬರ ಹಾಗೂ ಕ್ರಿಮಿನಾಶಕ ಮಾರಾಟ ಮಾಡುತ್ತಿದ್ದಾರೆ. ರೈತರನ್ನು ಶೋಷಣೆ ಮಾಡುತ್ತಿದ್ದರೂ ಕೃಷಿ ಇಲಾಖೆ ಗಮನಹರಿಸುತ್ತಿಲ್ಲ. ಕೃಷಿ ಹೊಂಡ ನಿರ್ಮಾಣದಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ. ಸಬ್ಸಿಡಿ ದರದಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳನ್ನು ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡುತ್ತಿದ್ದಾರೆ. ರೈತರು ಕೇಳಿದರೆ ನಾಳೆ ಬಾ ಎಂಬ ಉತ್ತರ ನೀಡುತ್ತಾರೆ’ ಎಂದು ಪ್ರತಿಭಟನಾನಿರತರು ಆರೋಪಿಸಿದರು.
‘ರೈತ ಸಂಪರ್ಕ ಕೇಂದ್ರದಲ್ಲಿ ಸರ್ಕಾರದ ಮಾರ್ಗಸೂಚಿಯ ನಿಯಮದಂತೆ ರಸಗೊಬ್ಬರ ವಿತರಿಸಬೇಕು. ಎಲ್ಲಾ ರೈತರಿಗೂ ಸಬ್ಸಿಡಿ ದರದಲ್ಲಿ ಕೃಷಿ ಯಂತ್ರಗಳನ್ನು ನೀಡಬೇಕು. ಕೃಷಿ ಇಲಾಖೆಯಲ್ಲಿರುವ ದಲ್ಲಾಳಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದರು.