ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲ್ಲೂಕಿನ ಕುಡ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವಪುರದ ನವಿಲುಗುಡ್ಡದ ಸರ್ವೆ ನಂ 51ರ ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಸ್ಥಳವನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಬುಧವಾರ ಪರಿಶೀಲನೆ ಮಾಡಿದ್ದಾರೆ.
ಗಣಿವಿಜ್ಞಾನ ಇಲಾಖೆಯ ಜಿಯಾಲಜಿಸ್ಟ್ ದಯಾನಂದ, ಕಿರಿಯ ಎಂಜಿನಿಯರ್ ರಾಘವನ್ ಅವರು ಗಣಿಗಾರಿಕೆ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ. ಅಲ್ಲಿನ ಚಟುವಟಿಕೆಗಳು ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.
ಹಿರಿಯ ಭೂವಿಜ್ಞಾನಿ ಡಾ.ಎಂ.ಜೆ.ಮಹೇಶ್ ಅವರು ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ, ‘ಗ್ರಾಮಸ್ಥರ ದೂರಿನ ಮೇರೆಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿನ ಚಟುವಟಿಕೆಗಳ ಕುರಿತು ಅಧಿಕಾರಿಗಳು ವರದಿ ನೀಡಲಿದ್ದಾರೆ’ ಎಂದು ತಿಳಿಸಿದರು.
ಸ್ಫೋಟಕ ಬಳಕೆ ಪರವಾನಗಿ ಪಡೆಯದೆಯೇ ಕಲ್ಲುಗಣಿಗಾರಿಕೆ ಪ್ರದೇಶದಲ್ಲಿ ಡೈನಮೈಟ್ ಬಳಸಿ ಬಂಡೆಗಳನ್ನು ಸ್ಫೋಟಿಸಲಾಗುತ್ತಿದೆ, ಈ ಪ್ರದೇಶದ ಸುತ್ತ ಕಾಂಪೌಂಡ್ ನಿರ್ಮಿಸಿಲ್ಲ, ರಾತ್ರಿ ವೇಳೆ ಕಲ್ಲುಗಣಿಗಾರಿಕೆ ಮಾಡಲಾಗುತ್ತಿದೆ ಮತ್ತು ಕಲ್ಲುಗಳನ್ನು ಸಾಗಣೆ ಮಾಡಲಾಗುತ್ತಿದೆ.
ನಿಯಮ ಉಲ್ಲಂಘಿಸಿ ಕಲ್ಲುಗಣಿಗಾರಿಕೆ ಮಾಡಲಾಗುತ್ತಿದೆ ಎಂದು ನವಿಲುಗುಡ್ಡ ಮತ್ತು ದುರ್ಗದಕೋಟೆ ಪರಿಸರ ಸಂರಕ್ಷಣಾ ಸಮಿತಿ ಅಧ್ಯಕ್ಷ ಕೆ.ಜಿ.ಸುರೇಶ್, ಕಾರ್ಯದರ್ಶಿ ಹೇಮಚಂದ್ರ, ಸಂಘಟನಾ ಕಾರ್ಯದರ್ಶಿ ಸಿದ್ದಪ್ಪ ಅವರು ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ದೂರು ಸಲ್ಲಿಸಿದ್ದರು.