ಬೆಂಗಳೂರು: ವಿಧಾನಸೌಧ ವಜ್ರ ಮಹೋತ್ಸವದ ಅಂಗವಾಗಿ ಅಕ್ಟೋಬರ್ 6ರಂದು ನಡೆಯಲಿರುವ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಭಾಷಣ ಮಾಡಲಿದ್ದಾರೆ.
ವಿಧಾನಸೌಧ ನಿರ್ಮಾಣವಾಗಿ 60 ವರ್ಷ ಪೂರ್ಣಗೊಂಡ ಸಂಭ್ರಮಾಚರಣೆಯನ್ನು ಅ.6 ಮತ್ತು 7ರಂದು ನಡೆಸಲು ವಜ್ರ ಮಹೋತ್ಸವ ಸಮಿತಿ ನಿರ್ಧರಿಸಿದೆ.
ಮೊದಲ ದಿನ ಮಧ್ಯಾಹ್ನದವರೆಗೆ ಜಂಟಿ ಅಧಿವೇಶನ ನಡೆಯಲಿದೆ. ಬ್ಯಾಂಕ್ವೆಟ್ ಹಾಲ್ನಲ್ಲಿ ಸಂಜೆ ನಡೆಯಲಿರುವ ಸಮಾರಂಭದಲ್ಲಿ ಹಿರಿಯ ಸಂಸದೀಯ ಪಟುಗಳನ್ನು ಸನ್ಮಾನಿಸಲಾಗುವುದು. ಈ ಸಂದರ್ಭದಲ್ಲಿ ಹೊರತರಲಿರುವ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಲಾಗುವುದು.
ವಜ್ರ ಮಹೋತ್ಸವದ ಅಂಗವಾಗಿ ನಿರ್ಮಿಸುತ್ತಿರುವ ಸಾಕ್ಷ್ಯ ಚಿತ್ರಗಳ ಪ್ರದರ್ಶನ ಅ.7ರಂದು ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯಲಿದೆ.
ವಿಧಾನಸೌಧ ನಿರ್ಮಾಣ ಕುರಿತು ಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಹಾಗೂ ಕಲಾಪ ನಡೆದು ಬಂದ ಹಾದಿಯ ಕುರಿತು ಚಿತ್ರ ನಿರ್ದೇಶಕ ಟಿ.ಎನ್. ಸೀತಾರಾಂ ಸಾಕ್ಷ್ಯ ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.