ನವದೆಹಲಿ: ಚಾಮರಾಜನಗರ ಜಿಲ್ಲೆಯಲ್ಲಿ ₹ 91 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕೈಗಾರಿಕಾ ಪಾರ್ಕ್ಗೆ, ಕೇಂದ್ರ ಸರ್ಕಾರದ ಪರಿಸರ ಸಚಿವಾಲಯವು ಸಮ್ಮತಿ ನೀಡಿದೆ.
ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯು (ಕೆಐಎಡಿಬಿ) ಅಭಿವೃದ್ಧಿಪಡಿಸಲಿರುವ ಉದ್ದೇಶಿತ ಪಾರ್ಕ್ 1,460 ಎಕರೆ ಪ್ರದೇಶ
ದಲ್ಲಿ ಅಸ್ತಿತ್ವಕ್ಕೆ ಬರಲಿದೆ.
‘ಕೆಳ್ಳಂಬಳ್ಳಿ ಮತ್ತು ಬದನಕುಪ್ಪೆ ಗ್ರಾಮಗಳ ಬಳಿಈ ಪಾರ್ಕ್ ನಿರ್ಮಾಣ ಆಗಲಿದೆ. 17 ಸಾವಿರ ಜನರಿಗೆ ಇಲ್ಲಿ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ ಎಂದು ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆಯಬೇಕು, ಯೋಜನೆ ಜಾರಿಗೆ ವಿಶೇಷ ನಿಧಿ ಸ್ಥಾಪಿಸಬೇಕು, ಪರಿಸರ ಸಂರಕ್ಷಣೆಗೆ ಬದ್ಧವಾಗಿರಬೇಕು ಎಂದು ಕೇಂದ್ರ ಪರಿಸರ ಸಚಿವಾಲಯವು ‘ಕೆಐಎಡಿಬಿ’ಗೆ ಕೆಲ ಷರತ್ತುಗಳನ್ನು ವಿಧಿಸಿದೆ. ಎರಡು ವರ್ಷಗಳ ಹಿಂದೆ ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು.