ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಸಿದ ಪ್ರಕರಣದ ಸಂಬಂಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಂದಾಯ ನಿರೀಕ್ಷಕರಾಗಿದ್ದ ಟಿ.ಸಿ. ರಾಮಕೃಷ್ಣಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಗುರುವಾರ ಒಂದು ವರ್ಷ ಜೈಲು ಶಿಕ್ಷೆ ಮತ್ತು ₹ 37 ಲಕ್ಷ ದಂಡ ವಿಧಿಸಿದೆ.
ರಾಮಕೃಷ್ಣ ಬಿಬಿಎಂಪಿ ರಾಜರಾಜೇಶ್ವರಿ ನಗರ ಸಹ ಕಂದಾಯ ಅಧಿಕಾರಿಗಳ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ 2006ರ ಫೆ.18ರಂದು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು.
ನಾಗರಬಾವಿ, ಮಾಳಗಾಳದಲ್ಲಿ ಪತ್ನಿ ಹಾಗೂ ತಮ್ಮ ಹೆಸರಿನಲ್ಲಿ ಮೂರು ಸೈಟ್ಗಳು, ₹ 1.20 ಲಕ್ಷ ಮೌಲ್ಯದ ಚಿನ್ನಾಭರಣ, ₹ 7.66 ಲಕ್ಷ ಮೌಲ್ಯದ ಕಾರು ಹಾಗೂ ದ್ವಿಚಕ್ರ ವಾಹನಗಳು ಹಾಗೂ ಅಪಾರ ಪ್ರಮಾಣದ ಆಸ್ತಿ ದಾಖಲೆಗಳು ಪತ್ತೆಯಾಗಿದ್ದವು.
ಲೋಕಾಯುಕ್ತ ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ರಾಮಕೃಷ್ಣ ಅವರು ₹ 35.10 ಲಕ್ಷ ಅಕ್ರಮ ಆಸ್ತಿ (ಶೇ 78.37) ಸಂಪಾದಿಸಿರುವುದು ಪತ್ತೆಯಾಗಿತ್ತು.