ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಾಚೀನ ಭಾರತದಲ್ಲಿ ದುರ್ಗೆ ರಕ್ಷಣಾ ಸಚಿವೆ, ಲಕ್ಷ್ಮಿ ಹಣಕಾಸು ಮಂತ್ರಿ: ವೆಂಕಯ್ಯನಾಯ್ಡು

Last Updated 22 ಸೆಪ್ಟೆಂಬರ್ 2017, 12:14 IST
ಅಕ್ಷರ ಗಾತ್ರ

ಚಂಡೀಗಡ: ಪ್ರಾಚೀನ ಭಾರತದಲ್ಲಿ ದುರ್ಗೆ ದೇಶದ ರಕ್ಷಣಾ ಮಂತ್ರಿಯಾಗಿ ಹಾಗೂ ಲಕ್ಷ್ಮಿ ಹಣಕಾಸು ಸಚಿವೆಯಾಗಿದ್ದರು ಎಂದು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ಅಭಿಪ್ರಾಯಪಟ್ಟಿದ್ದಾರೆ.

ಶುಕ್ರವಾರ ಮೊಹಾಲಿಯಲ್ಲಿ ನಡೆದ ಇಂಡಿಯನ್‌ ಸ್ಕೂಲ್‌ ಆಫ್‌ ಬ್ಯುಸಿನೆಸ್‌(ಐಎಸ್‌ಬಿ)ನ ನಾಯಕತ್ವ ಸಮಾವೇಶದಲ್ಲಿ ಮಾತನಾಡಿದ ಅವರು, ಮಹಿಳಾ ಸಬಲೀಕರಣದ ಅಗತ್ಯತೆಯನ್ನು ಸಮರ್ಥಿಸಿಕೊಳ್ಳುವ ಸಲುವಾಗಿ ಈ ರೀತಿ ಹೇಳಿದರು.

‘ವಿದ್ಯಾರ್ಥಿಗಳು ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಪಡಬೇಕು. ರಾಮರಾಜ್ಯ ಎನ್ನುವುದು ಇಂದಿಗೂ ನಮ್ಮ ಇತಿಹಾಸದ ಶ್ರೇಷ್ಠ ಕಾಲಘಟ್ಟವಾಗಿದೆ. ಅದಕ್ಕೆ ಕಾರಣ ಆ ಆಡಳಿತ ವ್ಯವಸ್ಥೆಯಲ್ಲಿದ್ದ ಆದರ್ಶಗಳು. ಆದರೆ ಇತ್ತೀಚಿನ ದಿನಗಳು ಅದನ್ನು ಕೋಮು ಭಾವ ದೃಷ್ಟಿಯಲ್ಲಿ ನೋಡಲಾಗುತ್ತಿದೆ’ ಎಂದು ಹೇಳಿದರು.

‘ನಾನು ಹೃದಯದಿಂದ ಮಾತನಾಡುವುದಿಲ್ಲ ಎಂದು ಹಲವರು ಟೀಕಿಸಿದ್ದಾರೆ. ನಾನೀಗ ದೇಶದ ಉಪರಾಷ್ಟ್ರಪತಿಯಾಗಿದ್ದೇನೆ. ಈಗ ಹೃದಯದಿಂದ ಮಾತನಾಡಲು ಸಾಧ್ಯವಿಲ್ಲ. ಹೃದಯದಿಂದ ಮಾತನಾಡುವುದಾದರೆ ಅದು ದೊಡ್ಡದಾಗಿಬಿಡುತ್ತದೆ. ಅದು ನನ್ನ ಆರೋಗ್ಯಕ್ಕೆ ಒಳ್ಳೆಯದಲ್ಲ’ ಎಂದು ತಮಾಷೆ ದನಿಯಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದರು.

‘ನಿಮ್ಮ ಮಾತೃ ಭಾಷೆ ತಿಳಿಯದ ವ್ಯಕ್ತಿ ಜತೆ ಮಾತ್ರವೇ ಬೇರೆ ಭಾಷೆಯಲ್ಲಿ ಮಾತನಾಡಿ’ ಎಂದು ಸಲಹೆ ನೀಡಿದ ಅವರು, ಸದ್ಯ ಅಸಹಿಷ್ಣತೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಕುರಿತ ವಿಸ್ತೃತ ಚರ್ಚೆಯಾಗುತ್ತಿದೆ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೂ ಸಾಂವಿಧಾನಿಕ ಚೌಕಟ್ಟಿರುವುದನ್ನು ಮರೆಯಬಾರದು. ಪ್ರಜಾಪ್ರಭುತ್ವಕ್ಕಾಗಿ ಕಾನೂನುಗಳ ಅಗತ್ಯವಿದೆ. ಪ್ರತಿಯೊಬ್ಬ ವ್ಯಕ್ತಿಯ ಘನತೆಯೂ ಮುಖ್ಯ. ಆದರೆ, ಇದು ದೇಶದ ಸಮಗ್ರತೆಗಿಂತ ದೊಡ್ಡದಲ್ಲ ಎಂತಲೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT