ಕಲಬುರ್ಗಿ: ಆಳಂದ ತಾಲ್ಲೂಕು ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಸಮುದಾಯ ಬಾನುಲಿ ಕೇಂದ್ರ ಸ್ಥಾಪಿಸುವಂತೆ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಸಚಿವ ಪ್ರಕಾಶ ಜಾವಡೇಕರ್ ಸೂಚಿಸಿದರು. ಗುರುವಾರ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ, ಅಭಿವೃದ್ಧಿ ಕುರಿತು ಕುಲಪತಿ ಅವರಿಂದ ಮಾಹಿತಿ ಪಡೆದರು.
‘ವಿಶ್ವವಿದ್ಯಾಲಯದಲ್ಲಿ ದೇಶದ ನಾನಾ ರಾಜ್ಯಗಳ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಒಂದು ಭಾರತ–ಶ್ರೇಷ್ಠ ಭಾರತ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಪರಸ್ಪರ ಭಾಷೆ, ಸಂಸ್ಕೃತಿ ಮತ್ತು ಮೌಲ್ಯಗಳ ವಿನಿಮಯಕ್ಕೆ ಅನುವು ಕಲ್ಪಿಸಬೇಕು’ ಎಂದರು.