ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳಿಗೆ ವಿಶ್ವೇಶ್ವರಯ್ಯನವರು ಮಾದರಿಯಾಗಲಿ

Last Updated 23 ಸೆಪ್ಟೆಂಬರ್ 2017, 8:37 IST
ಅಕ್ಷರ ಗಾತ್ರ

ಗುಡಿಬಂಡೆ: ‘ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಅಂತರರಾಷ್ಟ್ರೀಯ ಮಟ್ಟಕ್ಕೆ ಏರಿದ ವಿಶ್ವೇಶ್ವರಯ್ಯನವರ ಸಾಧನೆಯನ್ನು ಮಕ್ಕಳು ಸ್ಫೂರ್ತಿಯಾಗಿರಿಸಿಕೊಳ್ಳಬೇಕು’ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಅನುರಾಧ ಆನಂದ್ ತಿಳಿಸಿದರು.

ಸರ್.ಎಂ.ವಿಶ್ವೇಶ್ವರಯ್ಯ ಜನ್ಮ ದಿನಾಚರಣೆ ಅಂಗವಾಗಿ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಕಸಾಪ ತಾಲ್ಲೂಕು ಘಟಕದ ವತಿಯಿಂದ ಹಮ್ಮಿಕೊಂಡಿದ್ದ ‘ಜ್ಞಾನ ದೀವಿಗೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಹಲವು ಕ್ಷೇತ್ರಗಳಲ್ಲಿ ಶ್ಲಾಘನೀಯ ಸೇವೆ ಸಲ್ಲಿಸಿದ ವಿಶ್ವೇಶ್ವರಯ್ಯ ಅವರು ಬದುಕು ವಿದ್ಯಾರ್ಥಿಗಳಿಗೆ ಆದರ್ಶವಾಗಬೇಕು. ಅವರಲ್ಲಿದ್ದ ಶ್ರದ್ಧೆ, ಶಿಸ್ತು, ಸಮಯಪಾಲನೆ ಗುಣ ರೂಢಿಸಿಕೊಳ್ಳುವ ಮೂಲಕ ಮಕ್ಕಳು ಭವಿಷ್ಯದಲ್ಲಿ ಉನ್ನತ ಸ್ಥಾನಗಳಿಗೆ ಏರಬೇಕು’ ಎಂದು ಹೇಳಿದರು.

ಪಟ್ಟಣ ಪಂಚಾಯತಿ ಅಧ್ಯಕ್ಷ ಜಿ.ಎಸ್.ಚಂದ್ರಶೇಖರ್ ಮಾತನಾಡಿ, ‘ವಿಶ್ವೇಶ್ವರಯ್ಯ ಅವರ ದೂರದೃಷ್ಟಿ ಯೋಜನೆಗಳು ಹಾಗೂ ಅಭಿವೃದ್ಧಿ ಚಿಂತನೆ ಇಂದಿಗೂ ಪ್ರಸ್ತುತ. ಅವರ ಕರ್ತವ್ಯ ನಿಷ್ಠೆ ಹಾಗೂ ಸಾರ್ವಜನಿಕರ ಕೆಲಸಗಳಲ್ಲಿ ಅವರಿಗಿದ್ದ ಕಾಳಜಿಯನ್ನು ನಾವು ಸ್ಮರಿಸಬೇಕಿದೆ’ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಏರ್ಪಡಿಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪಟ್ಟಣ ಪಂಚಾಯಿತಿ ಸದಸ್ಯ ದ್ವಾರಕನಾಥ ನಾಯ್ಡು, ಕಸಾಪ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ವಾಹಿನಿ ಸುರೇಶ್, ಗೌರವ ಕಾರ್ಯದರ್ಶಿಗಳಾದ ವಿ. ಶ್ರೀರಾಮಪ್ಪ, ಬಿ.ಮಂಜುನಾಥ, ನಗರ ಘಟಕದ ಅಧ್ಯಕ್ಷ ರಾಮಾಂಜಿ, ಕವಿಗಳಾದ ಮಂಜುನಾಥ ಗಣಪತಿ ಹೆಗಡೆ, ಫಯಾಜ್ ಅಹಮ್ಮದ್, ಎಲ್. ಕಮಲಾಕ್ಷಿ, ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ವಿ. ಆನಂದ್, ಜೈ ಕರ್ನಾಟಕ ಜಿಲ್ಲಾ ಘಟಕದ ಉಪಾಧ್ಯಕ್ಷ ತಿಮ್ಮಾರೆಡ್ಡಿ, ಮುಖ್ಯ ಶಿಕ್ಷಕರಾದ ಜಿ.ವಿ ಗಂಗರತ್ನಮ್ಮ, ತಹಸೀನ್ ತಾಜ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT