ಶಿಡ್ಲಘಟ್ಟ: ‘ದೇಶದ ಬೆನ್ನೆಲುಬಾದ ರೈತ ಆತ್ಮಹತ್ಯೆ ಏಕೆ ಮಾಡಿಕೊಳ್ಳುತ್ತಿದ್ದಾನೆ ಎನ್ನುವ ಬಗ್ಗೆ ಸರ್ಕಾರ ಅಧ್ಯಯನ ನಡೆಸದೇ ಇರುವುದು ದೇಶದ ದುರಂತ’ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಎಂ.ರವಿಕುಮಾರ್ ಹೇಳಿದರು.
ರೈತರ ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಆಯೋಜಿಸಲಾಗಿರುವ ರೈತರ ಬೃಹತ್ ಸಮಾವೇಶದಲ್ಲಿ ಭಾಗವಹಿಸಲು ತೆರಳುವ ಮುನ್ನ ನಗರದ ಕೋಟೆ ವೃತ್ತದಲ್ಲಿ ಮಾತನಾಡಿದರು.
‘ಋಣ ಮುಕ್ತ ರೈತ ಸಮಾಜ ನಿರ್ಮಾಣ ಸೇರಿದಂತೆ ಸ್ವಾಮಿನಾಥನ್ ವರದಿ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಏರ್ಪಡಿಸಿರುವ ಬೃಹತ್ ರೈತ ಸಮಾವೇಶದಲ್ಲಿ ದೇಶದ ನಾನಾ ಭಾಗದ ರೈತರು ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ ಭಾಗವಹಿಸಿ, ಈ ಭಾಗದ ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಹೊರಟಿದ್ದೇವೆ’ ಎಂದು ಅವರು ಹೇಳಿದರು.
ಸಮಾವೇಶಕ್ಕೆ ಹೊರಡು ಮುನ್ನ ರೈತ ಸಂಘದ ಪದಾಧಿಕಾರಿಗಳು ನಗರದ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ನಿರ್ಮಿಸಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.