ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಗೆ ಈಗಾಗಲೇ ಭರ್ಜರಿ ಸಿದ್ಧತೆಯಲ್ಲಿ ತೊಡಗಿರುವ ರಾಜ್ಯ ಕಾಂಗ್ರೆಸ್ ನಾಯಕರು, ದೆಹಲಿಯಲ್ಲಿ ಗುರುವಾರ ಪಕ್ಷದ ವರಿಷ್ಠರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.
ಸಂಜೆ 4 ಗಂಟೆಗೆ ಜನಪಥ್ದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಪ್ರಮುಖರ ಜೊತೆ ನಡೆಯ
ಲಿರುವ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ, ಕಾರ್ಯಾಧ್ಯಕ್ಷರಾದ ದಿನೇಶ್ ಗುಂಡೂರಾವ್, ಎಸ್.ಆರ್. ಪಾಟೀಲ, ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗವಹಿಸುವರು.
ರಾಜ್ಯದ ನಾಲ್ಕು ಕಂದಾಯವಿಭಾಗಗಳಜವಾಬ್ದಾರಿ ಹೊತ್ತಿರುವ ನಾಲ್ವರು ಸಹ ಉಸ್ತುವಾರಿಗಳೂ ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
‘ಬೆಳಿಗ್ಗೆ 12 ಗಂಟೆಗೆ ಈ ಸಭೆ ನಡೆಯಬೇಕಿತ್ತು. ಆದರೆ, ಬೆಳಿಗ್ಗೆ 10 ಗಂಟೆಗೆ ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಧ್ಯಾಹ್ನ ಕೇಂದ್ರ ಇಂಧನ ಸಚಿವರು ಮತ್ತು ಕಲ್ಲಿದ್ದಲು ಸಚಿವರನ್ನು ಭೇಟಿ ಮಾಡುವ ಕಾರ್ಯಕ್ರಮವಿದೆ. ಹೀಗಾಗಿ ಸಭೆ ಸಂಜೆ ನಡೆಯಲಿದೆ’ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
‘ಚುನಾವಣೆಗೆ ಪೂರ್ವಭಾವಿಯಾಗಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಕುರಿತು ಸಭೆಯಲ್ಲಿ ಹಲವು ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ. ಜೊತೆಗೆ, ವಿರೋಧ ಪಕ್ಷದ ಬಿಜೆಪಿ ಈಗಾಗಲೇ ರೂಪಿಸಿಕೊಂಡಿರುವ ಕಾರ್ಯಕ್ರಮಗಳು, ಮುಂದಿನ ನಡೆ, ಆ ಸವಾಲುಗಳನ್ನು ಎದುರಿಸಲು ಏನೇನು ತಯಾರಿ ಮಾಡಿಕೊಳ್ಳಬೇಕು ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ’ ಎಂದು ಮೂಲಗಳು ತಿಳಿಸಿವೆ.
‘ಕೆಲವು ಜಿಲ್ಲೆಗಳಲ್ಲಿ ಬೂತ್ ಮಟ್ಟದ ಸಮಿತಿಗಳ ರಚನೆ ಇನ್ನೂ ಪೂರ್ಣಗೊಂಡಿಲ್ಲ. ಈವರೆಗೆ ಎಷ್ಟು ಸಮಿತಿಗಳು ರಚನೆ ಆಗಿವೆ, ಉಳಿದ ಕಡೆ ಸಮಿತಿಗಳು ರಚನೆ ಆಗದಿರಲು ಕಾರಣವೇನು ಎಂಬ ಬಗ್ಗೆಯೂ ವಿಷಯ ಪ್ರಸ್ತಾಪವಾಗಲಿದೆ. ಬೂತ್ಮಟ್ಟ ಏಜೆಂಟರ ರಾಜ್ಯಮಟ್ಟದ ಸಮಾವೇಶದ ದಿನ ನಿಗದಿಪಡಿಸುವ ಸಾಧ್ಯತೆಯೂ ಇದೆ’ ಎಂದೂ ಮೂಲಗಳು ಹೇಳಿವೆ.
‘ರಾಹುಲ್ ಗಾಂಧಿ ಅವರು ಸಹ ಉಸ್ತುವಾರಿಗಳಿಂದ ವಿಭಾಗವಾರು ಪಕ್ಷದ ಸ್ಥಿತಿಗತಿಯ ಪರಿಶೀಲನೆ ನಡೆಸಲಿದ್ದಾರೆ. ಮತದಾರರ ಓಲೈಕೆ ದೃಷ್ಟಿಯಿಂದ ಸರ್ಕಾರದ ಸಾಧನೆಗಳಿಗೆ ಹೆಚ್ಚಿನ ಪ್ರಚಾರ ನೀಡುವ ಸಂಬಂಧ ಮುಂದಿನ ದಿನಗಳಲ್ಲಿ ಜನಾಕರ್ಷಣೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆಯೂ ಚರ್ಚೆ ನಡೆಯಲಿದೆ’ ಎಂದೂ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.