ನವದೆಹಲಿ : ಸರ್ಕಾರಿ ಅಧಿಕಾರಿಗಳು ಮತ್ತು ನ್ಯಾಯಾಧೀಶರನ್ನು ತನಿಖೆಯಿಂದ ರಕ್ಷಿಸುವ ವಿವಾದಾತ್ಮಕ ಸುಗ್ರೀವಾಜ್ಞೆ ಹೊರಡಿಸಿರುವುದಕ್ಕೆ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರನ್ನು ಟೀಕಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ‘ಇದು 2017ನೇ ಇಸವಿ; 1817 ಅಲ್ಲ’ ಎಂದು ಹೇಳಿದ್ದಾರೆ.
‘ಮುಖ್ಯಮಂತ್ರಿಯವರೇ, ನಾವೀಗ 21ನೇ ಶತಮಾನದಲ್ಲಿದ್ದೇವೆ. ಇದು 2017; 1817 ಅಲ್ಲ’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ರಾಜಸ್ಥಾನದ ಸುಗ್ರೀವಾಜ್ಞೆಯು ವಾಕ್ ಸ್ವಾತಂತ್ರ್ಯಕ್ಕೆ ವಿರುದ್ಧವಾದುದು ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿರುವ ಮಾಧ್ಯಮ ವರದಿಯನ್ನೂ ಅವರು ಪ್ರಕಟಿಸಿದ್ದಾರೆ.
ಸುಗ್ರೀವಾಜ್ಞೆಯ ಪ್ರಕಾರ, ಸರ್ಕಾರದ ಅನುಮತಿ ಇಲ್ಲದೇ ನ್ಯಾಯಾಂಗದ ಮತ್ತು ಸರ್ಕಾರಿ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸುವಂತಿಲ್ಲ ಎಂದು ವರದಿ ಹೇಳಿದೆ.
ಈ ಸುಗ್ರೀವಾಜ್ಞೆಯು ಮಾಧ್ಯಮಗಳ ಮೇಲೆಯೂ ನಿರ್ಬಂಧ ಹೇರುತ್ತದೆ. ಸರ್ಕಾರ ತನಿಖೆಗೆ ಅನುಮತಿ ನೀಡುವವರೆಗೆ ಆರೋಪ ಕೇಳಿ ಬಂದಿರುವ ಅಧಿಕಾರಿಯ ಬಗ್ಗೆ ಮಾಧ್ಯಮಗಳು ಸುದ್ದಿ ಪ್ರಕಟಿಸುವಂತಿಲ್ಲ.
ಭ್ರಷ್ಟರನ್ನು ರಕ್ಷಿಸುವುದಿಲ್ಲ: ಈ ಮಧ್ಯೆ ಸುಗ್ರೀವಾಜ್ಞೆಗೆ ಸಂಬಂಧಿಸಿದಂತೆ ಶನಿವಾರ ರಾತ್ರಿ ಪ್ರಕಟಣೆ ಹೊರಡಿಸಿರುವ ರಾಜ್ಯ ಸರ್ಕಾರ, ಪ್ರಸ್ತಾವಿತ ಸುಗ್ರೀವಾಜ್ಞೆಯು ಭ್ರಷ್ಟ ಅಧಿಕಾರಿಗಳನ್ನು ರಕ್ಷಿಸುವುದಿಲ್ಲ ಎಂದು ಹೇಳಿದೆ.