ಶ್ರೀರಂಗಪಟ್ಟಣ: ಕ್ಷೇತ್ರದಿಂದ 2018ರ ಚುನಾವಣೆಯಲ್ಲಿ ರವೀಂದ್ರ ಶ್ರೀಕಂಠಯ್ಯ ಜಯಗಳಿಸಲಿದ್ದಾರೆ ಎಂದು ಹೇಳುವ ಮೂಲಕ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ರವೀಂದ್ರ ಶ್ರೀಕಂಠಯ್ಯ ಅವರಿಗೆ ಪಕ್ಷದ ಟಿಕೆಟ್ ನೀಡುವ ಸುಳಿವು ನೀಡಿದರು. ತಾಲ್ಲೂಕಿನ ಅರಕೆರೆ ಗ್ರಾಮದ ರವೀಂದ್ರ ನಿವಾಸಕ್ಕೆ ಭಾನುವಾರ ಭೇಟಿ ನೀಡಿ ಚರ್ಚಿಸಿದರು.
‘ರವೀಂದ್ರ ಶ್ರೀಕಂಠಯ್ಯ ಅವರು ಡಿಸೆಂಬರ್ನಲ್ಲಿ ಜೆಡಿಎಸ್ ಸೇರಲಿದ್ದಾರೆ. ನಂತರ ಅವರನ್ನು ಪಕ್ಷ ಸಂಘಟನೆಗೆ ತೊಡಗಿಸಿಕೊಳ್ಳಲಾಗುವುದು. ಶ್ರೀರಂಗಪಟ್ಟಣ ಕ್ಷೇತ್ರದಿಂದ ರೈತ ನಾಯಕ ಕೆ.ಎಸ್.ನಂಜುಂಡೇಗೌಡ ಅವರೂ ಟಿಕೆಟ್ ಕೇಳಿದ್ದಾರೆ. ಅವರನ್ನು ಪಕ್ಷದಲ್ಲಿ ಉಳಿಸಿ ಸೂಕ್ತ ಸ್ಥಾನಮಾನ ನೀಡಲಾಗುವುದು’ ಎಂದರು.
ಜೆಡಿಎಸ್ ಬಂಡಾಯ ಶಾಸಕರ ಬಗ್ಗೆ ಮಾತನಾಡಿದರೆ ಅದಕ್ಕೆ ಅರ್ಥ ಇಲ್ಲ. ರಾಜ್ಯದಲ್ಲಿ ಅಧಿಕಾರ ನಡೆಸುವುದೇ ನಮ್ಮ ಗುರಿ. ರಾಜ್ಯದ 224 ಕ್ಷೇತ್ರಗಳಲ್ಲೂ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದ್ದೇವೆ ಎಂದು ಹೇಳಿದರು.
ಜಿಎಸ್ಟಿ, ನೋಟು ರದ್ದತಿಯಿಂದ ಸಾಮಾನ್ಯ ಜನರು ಬವಣೆ ಪಡುತ್ತಿದ್ದಾರೆ. ರಾಜ್ಯದಲ್ಲಿ ರೈತರ ಆತ್ಮಹತ್ಯೆ ಮುಂದುವರಿದಿದ್ದರೂ ರಾಜ್ಯ ಸರ್ಕಾರ ಆತ್ಮಹತ್ಯೆ ತಡೆಗೆ ಕ್ರಮ ವಹಿಸುತ್ತಿಲ್ಲ. ಸರ್ಕಾರದ ರೈತ ವಿರೋಧಿ ಧೋರಣೆ ವಿರುದ್ಧ ಮುಂದೆ ಜನಾಂದೋಲನ ನಡೆಯಲಿದೆ ಎಂದರು.