ಚಾಮರಾಜನಗರ: ‘ಕುಲ ಕುಲವೆಂದು ಹೊಡೆದಾಡದಿರಿ... ಎಂದು ಕೀರ್ತನೆಗಳ ಮೂಲಕ ಸಮಾಜದಲ್ಲಿನ ನ್ಯೂನತೆಯನ್ನು ಸರಿಪಡಿಸಲು ಶ್ರಮಿಸಿದ ಸಂತ ಕನಕದಾಸರು’ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಎಂ.ಸಿ. ಮೋಹನಕುಮಾರಿ ಹೇಳಿದರು.
ನಗರದ ಮುದುಕು ಮಾರಮ್ಮ ದೇವಸ್ಥಾನದ ಮುಂಭಾಗ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಡೆದ ಭಕ್ತ ಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕನಕದಾಸರು 16ನೇ ಶತಮಾನದಲ್ಲಿ ಕ್ರಾಂತಿಕಾರಕ ಕೀರ್ತನೆಗಳನ್ನು ರಚಿಸುವ ಮೂಲಕ ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿ ಜನರಲ್ಲಿ ಸಾಮಾಜಿಕ ಪ್ರಜ್ಞೆ ಬೆಳೆಸಿದರು. ದಾಸ ಸಾಹಿತ್ಯಕ್ಕೆ ನೀಡಿದ ಅಪಾರ ಕೊಡುಗೆಯಿಂದ ಅವರು ಪೂಜ್ಯನೀಯವಾಗಿದ್ದಾರೆ ಎಂದರು.
ಮಧ್ಯಯುಗದಲ್ಲಿ ದಾಸ ಪರಂಪರೆ ವಿಶೇಷ ಸ್ಥಾನ ಪಡೆದಿತ್ತು. ಕನಕದಾಸರು ಸರಳ ಭಾಷೆಯಲ್ಲಿ ಕೀರ್ತನೆಗಳನ್ನು ರಚಿಸುವ ಮೂಲಕ ಭಕ್ತಿ ಪರಂಪರೆ ಹುಟ್ಟಿಹಾಕಿದರು ಎಂದರು. ನಿವೃತ್ತ ಪ್ರಾಂಶುಪಾಲ ಕೆಂಪರಾಜು ಮಾತನಾಡಿ, ಕುರುಬ ಎಂದರೆ ಜ್ಞಾನಿ ಎಂದರ್ಥ. ಎಲ್ಲರಿಗೂ ಒಳಿತು ಮಾಡುವವನು. ಎಲ್ಲರಂತೆ ಬದುಕುವವನು.
ಕುರುಬ ಜನಾಂಗದವರು ದುಶ್ಚಟಗಳಿಂದ ದೂರವಾಗಿ ಮಾನವೀಯ ಮೌಲ್ಯವನ್ನು ಅಳವಡಿಸಿ ಕೊಳ್ಳಬೇಕು. ಆಗ ಮಾತ್ರ ಕನಕದಾಸರಿಗೆ ಗೌರವ ನೀಡಿದಂತಾಗುತ್ತದೆ ಎಂದರು. ಮಹನೀಯರ ಜಯಂತಿಯನ್ನು ಜಾತಿಗೆ ಸಿಮೀತಗೊಳಿಸಿ ಆಚರಿಸಲಾಗುತ್ತಿದೆ. ಇದರಿಂದ ಸಮಾಜ ಒಡೆಯುತ್ತದೆ.
ಮುಂದಿನ ದಿನಗಳಲ್ಲಿ ಸರ್ಕಾರ ಎಲ್ಲ ಮಹನೀಯರ ಜಯಂತಿಯನ್ನು ಒಂದೇ ವೇದಿಕೆಯಲ್ಲಿ ಆಚರಿಸುವ ಮೂಲಕ ಸಕಲ ಸಮುದಾಯದ ಮುಖಂಡರನ್ನು ಒಗ್ಗೂಡಿಸಬೇಕು. ಕುವೆಂಪು ಅವರು ಹೇಳಿರುವ ವಿಶ್ವಮಾನವ ಧರ್ಮ ಸ್ಥಾಪಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಸಕ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ. ರಾಮಚಂದ್ರ, ಸದಸ್ಯರಾದ ಸಿ.ಎನ್. ಬಾಲರಾಜು, ಕೆ.ಪಿ. ಸದಾಶಿವಮೂರ್ತಿ, ಶಶಿಕಲಾ, ಬಿ.ಕೆ. ಬೊಮಯ್ಯ, ನಗರಸಭೆ ಅಧ್ಯಕ್ಷೆ ಶೋಭಾ, ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಆರ್. ಉಮೇಶ್, ಕಾಡಾ ಅಧ್ಯಕ್ಷ ಎಚ್.ಎಸ್. ನಂಜಪ್ಪ, ಚೂಡಾ ಅಧ್ಯಕ್ಷ ಸುಹೇಲ್ ಆಲಿಖಾನ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಎಚ್.ವಿ. ಚಂದ್ರು, ಎಚ್.ಎನ್. ನಟೇಶ್, ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಹರೀಶ್ಕುಮಾರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೀತಾಪ್ರಸನ್ನ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಉಪವಿಭಾಗಾಧಿಕಾರಿ ಫೌಜಿಯಾ ತರನಮ್, ಮುಖಂಡರಾದ ರಾಜಶೇಖರ್, ಸೋಮಣ್ಣೆಗೌಡ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.