ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿಯ ಅಚ್ಛೇದಿನ್‌ ಜನಸಾಮಾನ್ಯರಿಗಿಲ್ಲ

Last Updated 7 ನವೆಂಬರ್ 2017, 9:44 IST
ಅಕ್ಷರ ಗಾತ್ರ

ಕಾಪು (ಪಡುಬಿದ್ರಿ): ಜನಸಾಮಾನ್ಯರಿಗೆ ಇಲ್ಲದ ಪ್ರಧಾನಿ ನರೇಂದ್ರ ಮೋದಿಯವರ ಅಚ್ಛೇದಿನ್‌, ಕೇವಲ ಅಂಬಾನಿ ಮತ್ತು ಅದಾನಿಯಂತಹ ಬಂಡವಾಳ ಶಾಹಿಗಳಿಗೆ ಸಿಕ್ಕಿದೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ವೇಣುಗೋಪಾಲ್ ಆಕ್ರೋಶ ವ್ಯಕ್ತಪಡಿಸಿದರು.

ಅವರು ಸೋಮವಾರ ಕಾಪು ರಾಜೀವ ಭವನದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಪ್ರಗತಿ ಪರಿಶೀಲನೆಗೆ ಬಂದಿದ್ದ ವೇಳೆ ಕಾಂಗ್ರೆಸ್ ಪಕ್ಷದ ಎಲ್ಲ ಬೂತ್ ಅಧ್ಯಕ್ಷರು, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರು, ಜನಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಲ್ಕೂವರೆ ವರ್ಷಗಳಲ್ಲಿ ವಿವಿಧ ಯಶಸ್ವಿ ಯೋಜನೆಗಳಿಂದ ರಾಜ್ಯದ ಜನತೆಯನ್ನು ಒಗ್ಗೂಡಿಸುವ ಕಾರ್ಯದಲ್ಲಿ ಮಗ್ನರಾಗಿದ್ದಾರೆ. ಆದರೆ ಕೇಂದ್ರದಲ್ಲಿನ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ನೋಟು ರದ್ದತಿ, ಜಿಎಸ್ಟಿಗಳಂಥ ಯೋಜನೆಗಳಿಂದ ಜನರನ್ನು ವಿಭಜಿಸಿ ಆಳುವುದರಲ್ಲಿ ಮಗ್ನವಾಗಿದೆ ಎಂದರು.

ಮುಂದಿನ ವರ್ಷ ನಡೆಯಲಿರುವ ಕರ್ನಾಟಕ ರಾಜ್ಯದ ಚುನಾವಣೆಯು ಕಾಂಗ್ರೆಸ್ ಪಾಲಿಗೆ ಅತ್ಯಂತ ಮಹತ್ವದ್ದಾಗಲಿದೆ. ರಾಜ್ಯದಲ್ಲಿ ಮತ್ತೆ ಅಧಿಕಾರದ ಗದ್ದುಗೆ ಏರಲಿದ್ದು, 2019ರ ಸಂಸತ್ ಚುನಾವಣೆಯ ಬಳಿಕ ರಾಹುಲ್ ಗಾಂಧಿಯವರು ಭಾರತದ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿದರು.

ಕಾಪು ಕ್ಷೇತ್ರದಲ್ಲಿ ಮನೆ, ಮನೆಗೆ ಭೇಟಿ ಕಾರ್ಯಕ್ರಮ ಪೂರ್ಣ ಪ್ರಮಾಣದ ಬೂತ್ ಸಮಿತಿಗಳನ್ನು ರಚಿಸಿಕೊಂಡು ಅತ್ಯಂತ ಯಶಸ್ವಿಗೊಳಿಸಿದ್ದು, ಶೇಕಡಾ 95ರಷ್ಟು ಪೂರ್ಣಗೊಳಿಸಿರುವುದು ಶ್ಲಾಘನೀಯ ಎಂದರು.

ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್‌ ಮಾತನಾಡಿ, ಎರಡೂ ಉಪ ಚುನಾವಣೆಗಳನ್ನು ಸೋತಿರುವ ಬಿಜೆಪಿಯು, ಮುಂದಿನ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷಕ್ಕಾಗಲಿರುವ ಭರ್ಜರಿ ವಿಜಯವನ್ನು ಭಾರೀ ಮುಜುಗರದಿಂದ ಎದುರು ನೋಡಲಿದೆ. ಉಡುಪಿ ಜಿಲ್ಲೆಯ ಎಲ್ಲ 5 ಸ್ಥಾನಗಳನ್ನೂ ಕಾಂಗ್ರೆಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಾಸಕ ವಿನಯ ಕುಮಾರ್ ಸೊರಕೆ, ವಿವಿಧ ರಾಜ್ಯ ನಾಯಕರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ. ಬಾವ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ. ಗಫೂರ್, ವೀಕ್ಷಕರಾದ ಬಸವರಾಜ್, ರಮಾನಂದ ನಾಯಕ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ಚಂದ್ರ ಜೆ. ಶೆಟ್ಟಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT