ಮದ್ದೂರು: ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮದಲ್ಲಿ ಮಾಡಲಾಗುವ ಭಾಷಣದ ಪ್ರತಿಯನ್ನು ಮೊದಲೇ ಪೊಲೀಸ್ ಇಲಾಖೆಗೆ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ ಎಂದು ಡಿವೈಎಸ್ಪಿ ಸಿ.ಮಲ್ಲಿಕ್ ತಿಳಿಸಿದರು. ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗುರುವಾರ ಹಿಂದೂ ಹಾಗೂ ಮುಸ್ಲಿಂ ಮುಖಂಡರ ಶಾಂತಿ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಾಂತಿಯುತ ಆಚರಣೆಗೆ ಎಲ್ಲ ಸಿದ್ಧತೆ ಕೈಗೊಳ್ಳಲಾಗಿದೆ. ಕಾರ್ಯಕ್ರಮವನ್ನು ಪೂರ್ಣವಾಗಿ ವಿಡಿಯೊ ಚಿತ್ರೀಕರಣ ಮಾಡಲಾಗುತ್ತಿದೆ. ಅವಹೇಳನಕಾರಿ ಹಾಗೂ ಗಲಭೆ ಪ್ರಚೋದಿತ ಭಾಷಣ ಮಾಡಿದರೆ ಅಂಥವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಶುಕ್ರವಾರ ನಡೆಯಲಿರುವ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಮುನ್ನ ಪಟ್ಟಣದಲ್ಲಿ ಯಾವುದೇ ಬಗೆಯ ಬೈಕ್ ರ್ಯಾಲಿಯಾಗಲಿ, ಮೆರವಣಿಗೆಯನ್ನಾಗಲಿ ನಡೆಸದಂತೆ ಕಾರ್ಯಕ್ರಮ ಆಯೋಜಕರಿಗೆ ಎಚ್ಚರಿಕೆ ನೀಡಲಾಗಿದೆ. ಅಹಿತಕರ ಘಟನೆ ನಡೆಯದಂತೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದರು.
ಇದಕ್ಕೂ ಮುನ್ನ, ಬಿಜೆಪಿ ಮುಖಂಡ ಕದಲೂರು ಯೋಗಾನಂದ ಮಾತನಾಡಿ, ‘ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಹಿಂದೂ ಧರ್ಮಿಯರನ್ನು ಕುರಿತು ಅವಹೇಳನಕಾರಿ ಭಾಷಣ ಮಾಡದಂತೆ ಕಾರ್ಯಕ್ರಮ ಆಯೋಜಕರಿಗೆ ಎಚ್ಚರಿಕೆ ನೀಡಬೇಕು’ ಎಂದು ಒತ್ತಾಯಿಸಿದರು.
ಶಾದಿ ಮಹಲ್ ಸಮಿತಿಯ ಉಪಾಧ್ಯಕ್ಷ ಫೈರೊಜ್ ಖಾನ್ ಮಾತನಾಡಿ, ‘ಟಿಪ್ಪು ಜಯಂತಿಯನ್ನು ಶಾಂತಿಯುತವಾಗಿ ಆಚರಿಸಲು ಎಲ್ಲ ಸಿದ್ಧತೆ ನಡೆಸಲಾಗಿದೆ. ಅಶಾಂತಿ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಎಲ್ಲ ಮಸೀದಿ ಧ್ವನಿವರ್ಧಕಗಳ ಮೂಲಕ ಮುಸ್ಲಿಂ ಯುವಕರಿಗೆ ನಿರ್ದೇಶನ ನೀಡಿದ್ದೇವೆ’ ಎಂದರು.
ಬಿಜೆಪಿ ತಾಲ್ಲೂಕು ಘಟಕ ಅಧ್ಯಕ್ಷ ಲಕ್ಷ್ಮಣಕುಮಾರ್, ಜಿಲ್ಲಾ ಕಾರ್ಯದರ್ಶಿ ಮಲ್ಲಿಕಾರ್ಜುನ್, ವೀರಭದ್ರಸ್ವಾಮಿ, ಸಿಪಿಐ ಕೆ.ಪ್ರಭಾಕರ್, ಪಿ.ಎಸ್.ಐಗಳಾದ ಕುಮಾರ್, ಯೋಗಾನಂದ, ಮಂಜೇಗೌಡ, ಸಂತೋಷ್ ಇದ್ದರು.