ಮೈಸೂರು: ಪಿಎಚ್.ಡಿ ಪ್ರವೇಶ ಪರೀಕ್ಷೆಯ ರಾಜ್ಯಶಾಸ್ತ್ರ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದರಿಂದ ಮರುಪರೀಕ್ಷೆ ನಡೆಸಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ವಿದ್ಯಾರ್ಥಿಗಳು ಗುರುವಾರ ಕ್ರಾಫರ್ಡ್ ಭವನದ ಮುಂದೆ ಪ್ರತಿಭಟನೆ ನಡೆಸಿದರು.
ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ವಿಫಲವಾಗಿದೆ. ಇದರಿಂದ ಹಲವು ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಕಿಡಿಕಾರಿದರು.
ಪ್ರಕರಣದ ನೈತಿಕ ಹೊಣೆ ಹೊತ್ತು ಪ್ರಭಾರಿ ಕುಲಪತಿ ಪ್ರೊ.ದಯಾನಂದ ಮಾನೆ ಹಾಗೂ ಕುಲಸಚಿವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಒಕ್ಕೂಟದ ಅಧ್ಯಕ್ಷ ಎಂ.ಪವನಕುಮಾರ್, ಗೌರವ ಸಲಹೆಗಾರ ಕೆ.ಎನ್.ಕವಿರಾಜ್, ಗೌರವಾಧ್ಯಕ್ಷ ಪ್ರಸಾದ್, ಉಪಾಧ್ಯಕ್ಷ ಮಾದೇಶ್ ಸೇರಿದಂತೆ ಹಲವು ವಿದ್ಯಾರ್ಥಿಗಳಿದ್ದರು.
‘ಮೈಸೂರು ವಿ.ವಿ: ಪಿಎಚ್.ಡಿ ಪ್ರಶ್ನೆಪತ್ರಿಕೆಯಲ್ಲಿ ನಕಲು’ ಎಂಬ ಶೀರ್ಷಿಕೆಯಡಿ ‘ಪ್ರಜಾವಾಣಿ’ ಗುರುವಾರ ವಿಶೇಷ ವರದಿ ಪ್ರಕಟಿಸಿತ್ತು.