ಬಸವನಬಾಗೇವಾಡಿ: ‘ಜಿಲ್ಲೆಯ ನೀರಾವರಿ ಯೋಜನೆಗೆ ರಾಜ್ಯದ ಕಾಂಗ್ರೆಸ್ ಸರ್ಕಾರ ₹ 4,800 ಕೋಟಿ ಬಿಡುಗಡೆ ಮಾಡಿರುವುದನ್ನು ಹೊರತುಪಡಿಸಿದರೆ ಹೇಳಿಕೊಳ್ಳುವಷ್ಟು ಸಾಧನೆ ಮಾಡಿಲ್ಲ. ಜಿಲ್ಲೆಯ ನೀರಾವರಿ ಯೋಜನೆಗೆ ದೇವಗೌಡರ ಕೊಡುಗೆ ಮರೆಯುವಂತಿಲ್ಲ’ ಎಂದು ದೇವರಹಿಪ್ಪರಗಿ ಕ್ಷೇತ್ರದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.
ತಾಲ್ಲೂಕಿನ ಕಣಕಾಲ ಗ್ರಾಮದಲ್ಲಿ ಶುಕ್ರವಾರ ಉತ್ತರ ಕರ್ನಾಟಕ ಕನ್ನಡಿಗರ ಸ್ವಾಭಿಮಾನಿ ಯಾತ್ರೆಗೆ ಸ್ವಾಗತ ಕೋರಿದ ನಂತರ ದಸ್ತಗೀರಸಾಬ ದರ್ಗಾದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಜನತಾ ಪರಿವಾರದ ಸರ್ಕಾರದಲ್ಲಿ ಮುಖ್ಯಮಂತ್ರಿಗಳಾಗಿದ್ದ ಎಚ್.ಡಿ.ದೇವೇಗೌಡ, ರಾಮಕೃಷ್ಣ ಹೆಗಡೆ, ಜೆ.ಎಚ್. ಪಟೇಲ ಅವರು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವುಗಳನ್ನೇ ಸಿದ್ದರಾಮಯ್ಯನವರ ಸರ್ಕಾರ ನಕಲು ಮಾಡುವ ಮೂಲಕ ಎಲ್ಲವನ್ನು ನಾನೆ ಮಾಡಿದ್ದೇನೆ ಎಂದು ಹೇಳಿಕೊಳ್ಳುತ್ತಿದ್ದಾರೆ’ ಎಂದು ದೂರಿದರು.
ಬೃಹತ್ ಸಮಾವೇಶ: ‘ಉತ್ತರ ಕರ್ನಾಟಕ ಕನ್ನಡಿಗರ ಸ್ವಾಭಿಮಾನಿ ಯಾತ್ರೆಯು ನ.14 ರಂದು ಬೆಳಗಾವಿಗೆ ತಲುಪಲಿದೆ. ಅಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ನಾನು ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ. ಸಮಾವೇಶದಲ್ಲಿ ದೇವರಹಿಪ್ಪರಗಿ ಕ್ಷೇತ್ರದಿಂದ 20 ಸಾವಿರ ಜನರು ಭಾಗವಹಿಸಲಿದ್ದಾರೆ’ ಎಂದು ಹೇಳಿದರು.