ಚಿಕ್ಕಬಳ್ಳಾಪುರ: ‘ಶೈಕ್ಷಣಿಕವಾಗಿ ಪ್ರತಿಯೊಬ್ಬರೂ ಅಭಿವೃದ್ಧಿಯಾಗಬೇಕೆಂಬ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡು ಅನೇಕ ಯೋಜನೆ, ಸೌಲಭ್ಯಗಳು ರೂಪಿಸಿದರೂ ದೇಶದಲ್ಲಿ ಶೇ 100 ರಷ್ಟು ಸಾಕ್ಷರತೆ ಪ್ರಮಾಣ ಹೊಂದಲು ಸಾಧ್ಯವಾಗುತ್ತಿಲ್ಲ’ ಎಂದು ಶಾಸಕ ಡಾ.ಕೆ.ಸುಧಾಕರ್ ವಿಷಾದ ವ್ಯಕ್ತಪಡಿಸಿದರು.
ತಾಲ್ಲೂಕಿನ ಪೆರೇಸಂದ್ರ ಗ್ರಾಮದಲ್ಲಿ ಈಚೆಗೆ ₹ 1.75 ಕೋಟಿ ವೆಚ್ಚದ ವಿವಿಧ ಕಾಮಗಾರಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ದೇಶಕ್ಕೆ ಸ್ವಾಂತಂತ್ರ್ಯ ಬಂದು ದಶಕಗಳಾದರೂ ಸಾಕ್ಷರತೆ ಸಾಧನೆ ಗಳಿಸುವಲ್ಲಿ ವಿಫಲರಾಗಿದ್ದೇವೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಒತ್ತಾಯ ಪೂರ್ವಕವಾಗಿ ಶಿಕ್ಷಣ ಪಡೆಯಲು ಮುಂದಾದರೇ ಯಾವುದೇ ಪ್ರಯೋಜನವಿಲ್ಲ’ ಎಂದು ಹೇಳಿದರು.
‘ವಿದ್ಯಾರ್ಥಿಗಳು ಸಾಧನೆ ಮೆಟ್ಟಿಲೇರಲು ಸದಾ ಉತ್ಸಕರಾಗಿ ಶಿಕ್ಷಣ ಪಡೆಯಬೇಕು. ಸಮಾಜದಲ್ಲಿ ಉತ್ತಮ ಜೀವನ ನಡೆಸಲು ಗುರಿ ಅವಶ್ಯವಿರುವುದರಿಂದ ಸವಾಲಿನೊಂದಿಗೆ ಶಿಕ್ಷಣದ ಪರಿಪಕ್ವತೆ ಹೊಂದಬೇಕು’ ಎಂದರು.
‘ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಹೆಚ್ಚು ಎಂಜಿನಿಯರಿಗ್, ವೈದ್ಯ ವೃತ್ತಿಗೆ ಸೇರಬೇಕೆಂಬ ಹಂಬಲ ಹೊಂದಿರುತ್ತಾರೆ. ಈ ವೃತ್ತಿಯಲ್ಲಿ ಇಂದಿಗೂ ಉದ್ಯೋಗದ ಸಮಸ್ಯೆ ಕಾಡುತ್ತಿದೆ. ಆದ್ದರಿಂದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉದ್ಯೋಗದ ಸಮಸ್ಯೆ ನಿವಾರಿಸಿಕೊಳ್ಳಲು ವಿವಿಧ ಕ್ಷೇತ್ರಗಳಲ್ಲಿ ಹೊಸ ಆವಿಷ್ಕಾರ ಮಾಡುವ ಮೂಲಕ ದೇಶಕ್ಕೆ ಕೊಡುಗೆ ನೀಡುವಂತಹ ಆಲೋಚನೆ, ಮನೋಭಾವ ಬೆಳೆಸಿಕೊಳ್ಳಬೇಕು’ ಎಂದು ತಿಳಿಸಿದರು.
‘ಪೆರೇಸಂದ್ರ ಗ್ರಾಮದ ಅಭಿವೃದ್ಧಿಗಾಗಿ ಕಳೆದ ನಾಲ್ಕೂವರೆ ವರ್ಷಗಳಲ್ಲಿ ₹ 20 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚು ಒತ್ತು ನೀಡಲಾಗಿದೆ. ಜತೆಗೆ ಕ್ಷೇತ್ರದ ಶಾಸಕನಾಗಿ ಪ್ರಾಮಾಣಿಕವಾಗಿ ತಮ್ಮ ಜವಾಬ್ದಾರಿ ನಿರ್ವಹಿಸುತ್ತಿದ್ದೇನೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಶಾಸಕನಾಗಿ ಆಯ್ಕೆಯಾದರೆ ಕ್ಷೇತ್ರದಲ್ಲಿ ಕೈಗಾರಿಗಳ ಸ್ಥಾಪನೆಗೆ ಆದ್ಯತೆ ನೀಡುವ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಿಸಲಾಗುವುದು’ ಎಂದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ, ಎಪಿಎಂಸಿ ಅಧ್ಯಕ್ಷ ಗೋವಿಂದ ಸ್ವಾಮಿ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ತಿರುಮಳಪ್ಪ, ನಾರಾಯಣಪ್ಪ, ಶಂಕರರೆಡ್ಡಿ, ಪ್ರಸಾದ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.