ದಾವಣಗೆರೆ: ಮಹಿಳೆ ಮತ್ತು ಮಕ್ಕಳಿಗೆ ಸಂಬಂಧಿಸಿದ ಪ್ರಕರಣಗಳ ಇತ್ಯರ್ಥಕ್ಕೆ ಆದ್ಯತೆ ನೀಡಬೇಕು. ವಿವಿಧ ಇಲಾಖೆಗಳಿಗೆ ನೀಡಿದ ಅನುದಾನವನ್ನು ನಿಗದಿತ ಅವಧಿಯೊಳಗೆ ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ →ಜಿಲ್ಲಾಮಟ್ಟದ →ಮಕ್ಕಳ →ಸಹಾಯವಾಣಿ, →ಸಲಹಾ ಸಮಿತಿ →ಸಭೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, →ಕೌಟುಂಬಿಕ →ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ, ಸಮನ್ವಯ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಮಹಿಳಾ ಸಂರಕ್ಷಣಾಧಿಕಾರಿ ಪೂರ್ಣಿಮಾ ಮಾತನಾಡಿ, ‘ಮಹಿಳೆಯರ ಸಂರಕ್ಷಣಾ ಕಾಯ್ದೆ ಅಡಿ ಪ್ರಸಕ್ತ ಸಾಲಿನಲ್ಲಿ ಒಟ್ಟು 80 ಪ್ರಕರಣಗಳು ದಾಖಲಾಗಿದ್ದವು. ಇವುಗಳಲ್ಲಿ ಈಗಾಗಲೇ ಸಂರಕ್ಷಣಾಧಿಕಾರಿಗಳ ಆಪ್ತ ಸಮಾಲೋಚನೆ ಮೂಲಕ 57 ಪ್ರಕರಣಗಳು ಇತ್ಯರ್ಥವಾಗಿವೆ. ನ್ಯಾಯಾಲಯದಲ್ಲಿ ದಾಖಲಾಗಿದ್ದ ಮೂರು ಪ್ರಕರಣಗಳು ಇತ್ಯರ್ಥವಾಗಿವೆ. ಇನ್ನು 20 ಪ್ರಕರಣಗಳು ಬಾಕಿ ಉಳಿದಿವೆ’ ಎಂದು ಸಭೆಯ ಗಮನಕ್ಕೆ ತಂದರು.
ಮಹಿಳೆ ಹಾಗೂ ಮಕ್ಕಳಿಗೆ ಸಂಬಂಧಿಸಿದಂತೆ ಎಲ್ಲ ಪ್ರಕರಣಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಬಾಕಿ ಉಳಿದಿರುವ ಪ್ರಕರಣಗಳು ಯಾವ ಹಂತದಲ್ಲಿವೆ ಎನ್ನುವ ಬಗ್ಗೆ ಮುಂದಿನ ಸಭೆಯಲ್ಲಿ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ, ಪೂರ್ಣಿಮಾ ಅವರಿಗೆ ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವಿಜಯಕುಮಾರ್ ಮಾತನಾಡಿ, ‘ಪ್ರಸಕ್ತ ಸಾಲಿನಲ್ಲಿ ಒಟ್ಟು 56 ಬಾಲ್ಯವಿವಾಹ ದೂರುಗಳು ದಾಖಲಾಗಿದ್ದವು. ಇವುಗಳಲ್ಲಿ 44 ಪ್ರಕರಣಗಳನ್ನು ತಡೆಯಲಾಗಿದೆ. 9 ಪ್ರಕರಣಗಳು ಸುಳ್ಳು ಮಾಹಿತಿಯಿಂದ ಕೂಡಿದ್ದವು. ಪೊಲೀಸ್ ಠಾಣೆಯಲ್ಲಿ 3 ಪ್ರಕರಣಗಳು ಮಾತ್ರ ಬಾಕಿ ಉಳಿದಿವೆ’ ಎಂದು ಮಾಹಿತಿ ನೀಡಿದರು.
ನಗರದ ಶುಭೋದಯ ವಸತಿ ಕೇಂದ್ರಕ್ಕೆ ನ.18ರೊಳಗೆ ಸಿಸಿ ಟಿವಿ ಕ್ಯಾಮೆರಾ ಅಳವಡಿಸಬೇಕು ಎಂದು ಏಜೆನ್ಸಿಯ ಅಧಿಕಾರಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಸ್ವಾಧಾರ ವಸತಿಗೃಹಗಳಿಂದ ಬಿಡುಗಡೆಯಾದ ಸಂತ್ರಸ್ತರು ಪ್ರಸ್ತುತ ಏನು ಮಾಡುತ್ತಿದ್ದಾರೆ ಎಂಬ ಮಾಹಿತಿಯನ್ನೂ ಪಡೆಯಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆಂಗಬಾಲಯ್ಯ, ಡಿಎಚ್ಒ ಡಾ.ತ್ರಿಪುಲಾಂಬ, ಜಿಲ್ಲಾ ಆಸ್ಪತ್ರೆಯ ಅಧೀಕ್ಷಕಿ ಡಾ.ನೀಲಾಂಬಿಕೆ ಅವರೂ ಇದ್ದರು.