ನರಗುಂದ: ‘ಉತ್ತರ ಕರ್ನಾಟಕದ ಬಹುದಿನಗಳ ಬೇಡಿಕೆ ಮಹದಾಯಿ ಯೋಜನೆಯನ್ನು ಅನುಷ್ಠಾನಗೊಳಿಸಲು ರಾಜಕೀಯ ಪಕ್ಷಗಳು ನಿರ್ಲಕ್ಷ್ಯ ತೋರುತ್ತಿವೆ’ ಎಂದು ಮಹದಾಯಿ ಹೋರಾಟ ಸಮಿತಿ ಸದಸ್ಯ ರಮೇಶ ನಾಯ್ಕರ ಅವರು ಆರೋಪಿಸಿದರು. ಪಟ್ಟಣದಲ್ಲಿ ನಡೆಯುತ್ತಿರುವ ಮಹದಾಯಿ ಧರಣಿಯ 855ನೇ ದಿನ ಗುರುವಾರ ಅವರು ಮಾತನಾಡಿದರು.
‘ಗೋವಾದಲ್ಲಿ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ. ಈ ಯೋಜನೆಗೆ ಗೋವಾ ಸರ್ಕಾರದ ತಗಾದೆ ಹೆಚ್ಚಾಗಿದೆ. ಅದನ್ನು ಕಡಿಮೆ ಗೊಳಿಸಿ, ನಮ್ಮ ರೈತರ ಆಶೋತ್ತರ ಈಡೇರಬೇಕಾದರೆ, ಬಿಜೆಪಿ ನಾಯಕರ ಹೆಚ್ಚಿನ ಪ್ರಯತ್ನ ನಡೆಯಬೇಕು.
ಈಗಾಗಲೇ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಡಿ. 15ರವರೆಗೆ ಕಾಯಲಾಗುವುದು. ಗೋವಾದಲ್ಲಿ ಕಾಂಗ್ರೆಸ್ಸಿಗರು ವಿರೋಧ ಮಾಡಿದರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನವೊಲಿಸುವಲ್ಲಿ ಮುಂದಾಗಬೇಕು. ಮಹದಾಯಿಗೆ ರಾಜಕೀಯ ಪಕ್ಷಗಳು ಪ್ರಾಮಾಣಿಕವಾಗಿ ಪ್ರಯತ್ನ ಮಾಡಬೇಕು’ ಎಂದು ಒತ್ತಾಯಿಸಿದರು.
‘ಬಿಜೆಪಿ ನುಡಿದಂತೆ ನಡೆದರೆ, ರೈತರ ಬದುಕು ಹಸನಾಗುತ್ತದೆ. ರಾಜಕೀಯ ಪಕ್ಷಗಳು ಈ ಹೋರಾಟವನ್ನು ಲಘುವಾಗಿ ಪರಿಗಣಿಸದೇ ರೈತರ ಆಶೋತ್ತರಗಳಿಗೆ ಸ್ಪಂದಿಸಬೇಕು’ ಎಂದು ಮಹದಾಯಿ ಹೋರಾಟ ಸಮಿತಿ ಸದಸ್ಯ ರಾಘವೇಂದ್ರ ಗುಜಮಾಗಡಿ ಹೇಳಿದರು.