ಬಾಗಲಕೋಟೆ: ‘ಅಬಕಾರಿ ನಿಯಮಾವಳಿಯಂತೆ ಮದ್ಯ ಮಾರಾಟ ಮಾಡದೇ ಕಾನೂನು ಉಲ್ಲಂಘಿಸುತ್ತಿರುವ ಪರಿಣಾಮ ರಾಜ್ಯದಲ್ಲಿ ಮದ್ಯವ್ಯಸನಿಗಳ ಸಂಖ್ಯೆ ಹೆಚ್ಚಾಗುತ್ತಿದೆ’ ಎಂದು ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಎಚ್.ಸಿ.ರುದ್ರಪ್ಪ ಆತಂಕ ವ್ಯಕ್ತಪಡಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಗ್ರಾಮೀಣ ಮಟ್ಟದಲ್ಲಿಯೇ ಮದ್ಯಪಾನದ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಆಗಬೇಕಿದೆ’ ಎಂದರು.
‘ಮದ್ಯಪಾನ ಹಾಗೂ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಲು ಸರ್ಕಾರ ಈ ಮಂಡಳಿ ರಚಿಸಿದೆ. ಪ್ರತಿ ಜಿಲ್ಲೆಯಲ್ಲಿ 20 ಬೀದಿನಾಟಕ, ಶಾಲಾ ಕಾಲೇಜುಗಳಲ್ಲಿ ವಿಚಾರ ಸಂಕಿರಣ, ಹೆದ್ದಾರಿಯಲ್ಲಿ ಫಲಕಗಳ ಪ್ರದರ್ಶನ, ಆಕಾಶವಾಣಿ ಕಾರ್ಯಕ್ರಮ ಹಾಗೂ ರಾಜ್ಯದ ಪ್ರಮುಖ ಜಾತ್ರೆ, ಉತ್ಸವಗಳಲ್ಲಿ ವಸ್ತು ಪ್ರದರ್ಶನ ಮಳಿಗೆ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ’ ಎಂದರು.
ರಾಮೀಣ ಭಾಗದಲ್ಲಿ ಹೆಚ್ಚು ಜಾಗೃತಿ ಮೂಡಿಸುವುದು ಅಗತ್ಯವಿದೆ. ಸ್ತ್ರೀಶಕ್ತಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಕಾಲೇಜು ವಿದ್ಯಾರ್ಥಿಗಳನ್ನೊಳ ಗೊಂಡಂತೆ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಜಾಗೃತಿ ಮೂಡಿಸಬೇಕಿದೆ ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಎ.ಮೇಘಣ್ಣವರ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಮಲ್ಲಿಕಾರ್ಜುನ ಶಿವಯೋಗಪ್ಪ ಅಂಗಡಿ, ಸಯ್ಯದ್ ಅಲ್ಲಾಬಕ್ಷ್ ಮುಕ್ಬುಲ್ಸಾಬ್, ಬಿ.ವಿ.ಚೈತ್ರಾ, ಜಿಲ್ಲಾ ಆರೋಗ್ಯಾಧಿಕಾರಿ ಎ.ಎನ್.ದೇಸಾಯಿ ಉಪಸ್ಥಿತರಿದ್ದರು.