ಮಡಿಕೇರಿ: ‘ನಿರಾಶ್ರಿತರ ಪರಿಹಾರ ಕೇಂದ್ರ ಹಾಗೂ ವಿವಿಧ ಸಮುದಾಯ ಭವನಗಳಿಗೆ ಪ್ರಥಮ ಆದ್ಯತೆಯಲ್ಲಿ ನಿವೇಶನ ಒದಗಿಸಬೇಕು’ ಎಂದು ಜಿಲ್ಲಾಧಿಕಾರಿ ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈಚೆಗೆ ನಡೆದ ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ‘ಅಂಬೇಡ್ಕರ್, ವಾಲ್ಮೀಕಿ ಹಾಗೂ ಆದಿವಾಸಿ ಸಮುದಾಯ ಭವನ ಸೇರಿದಂತೆ ನಾನಾ ಭವನಗಳಿಗೆ ಸರ್ಕಾರ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದೆ. ಶೀಘ್ರವೇ ಭವನಗಳ ನಿರ್ಮಾಣ ಮಾಡಬೇಕಿದ್ದು, ಕಾಲಮಿತಿಯಲ್ಲಿ ನಿವೇಶನ ಒದಗಿಸಬೇಕು’ ಎಂದು ಸೂಚಿಸಿದರು.
‘ಸಮಾಜ ಕಲ್ಯಾಣ, ಐಟಿಡಿಪಿ ಇಲಾಖೆಗಳ ಅಧಿಕಾರಿಗಳು ನಿವೇಶನ ಸಂಬಂಧ ಹೆಚ್ಚಿನ ಕಾಳಜಿ ವಹಿಸಬೇಕು; ವಕ್ಫ್ ಮಂಡಳಿ ಆಸ್ತಿ ಸಂರಕ್ಷಣೆ ಮಾಡಬೇಕು’ ಎಂದು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶಕುಮಾರ, ಸಮುದಾಯ ಭವನಗಳಿಗೆ ಸಕಾಲದಲ್ಲಿ ನಿವೇಶನ ಹಂಚಿಕೆ ಮಾಡಲು ಹೆಚ್ಚಿನ ಮುತುವರ್ಜಿ ತೆಗೆದುಕೊಳ್ಳುವಂತೆ ಕಂದಾಯ ನಿರೀಕ್ಷಕರಿಗೆ ಸೂಚಿಸಿದರು.
ಉಪ ವಿಭಾಗಾಧಿಕಾರಿ ನಂಜುಂಡೇಗೌಡ, ತಹಶೀಲ್ದಾರ್ ಗೋವಿಂದರಾಜು, ಮಹೇಶ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಮಾಯಾದೇವಿ ಗಲಗಲಿ, ಐಟಿಡಿಪಿ ಇಲಾಖೆ ಅಧಿಕಾರಿ ಪ್ರಕಾಶ್, ಆಹಾರ ಇಲಾಖೆ ಉಪ ನಿರ್ದೇಶಕ ಪುಟ್ಟಸ್ವಾಮಿ, ಶಿರಸ್ತೇದಾರ್ ಅರುಣ್ ಸಾಗರ್, ಪ್ರಕಾಶ್ ಹಾಜರಿದ್ದರು.