ಕೊಚ್ಚಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ದೋಷಪೂರಿತ ನೀತಿಗಳ ವಿರುದ್ಧ ರಾಷ್ಟ್ರೀಯ ಮಟ್ಟದಲ್ಲಿ ಹೋರಾಡಲು ಕಾಂಗ್ರೆಸ್ ನಾಯಕತ್ವಕ್ಕೆ ಸಹಕಾರ ನೀಡುವಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಎಡ ಪಕ್ಷಗಳಿಗೆ ಕರೆ ನೀಡಿದ್ದಾರೆ.
ಕಾಂಗ್ರೆಸ್ ನೇತೃತ್ವದ ಯುಡಿಎಫ್ ಇಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, ‘ರಾಷ್ಟ್ರೀಯ ಮಟ್ಟದಲ್ಲಿ ನಾವು ಬಿಜೆಪಿಯನ್ನು ಒಟ್ಟಾಗಿ ಸೇರಿ ವಿರೋಧಿಸೋಣವೇ ಅಥವಾ ಬಿಜೆಪಿ ಮತ್ತು ಕಾಂಗ್ರೆಸ್ಗಳನ್ನು ಸಿಪಿಎಂ ಸಮಾನ ದೂರದಲ್ಲಿಡುತ್ತದೆಯೇ’ ಎಂದು ಪ್ರಶ್ನಿಸಿದ್ದಾರೆ.
‘ಬಿಜೆಪಿ ಮತ್ತು ಅದರ ಜನವಿರೋಧಿ ನೀತಿಗಳ ವಿರುದ್ಧದ ಹೋರಾಟದಲ್ಲಿ ಎಡಪಕ್ಷಗಳು ಪ್ರಾಮಾಣಿಕವಾಗಿದ್ದರೆ, ಅವುಗಳು ಕಾಂಗ್ರೆಸ್ನೊಂದಿಗೆ ಕೈಜೋಡಿಸಬೇಕು’ ಎಂದು ಅವರು ಹೇಳಿದ್ದಾರೆ.
ಕೇರಳದಲ್ಲಿರುವ ಸಿಪಿಎಂ ನೇತೃತ್ವದ ಎಲ್ಡಿಎಫ್ ಸರ್ಕಾರವನ್ನು ಟೀಕಿಸಿದ ಅವರು, ‘ಪಿಣರಾಯಿ ವಿಜಯನ್ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಕುಸಿದಿದೆ. ಮಹಿಳೆಯರಿಗೆ ಸುರಕ್ಷತೆ ಇಲ್ಲ. ರಾಜ್ಯದ ಆರ್ಥಿಕ ಪ್ರಗತಿಯೂ ನಿಧಾನವಾಗಿದೆ’ ಎಂದು ಸಿಂಗ್ ದೂರಿದ್ದಾರೆ.