ದೊಡ್ಡಬಳ್ಳಾಪುರ: ತಾಲ್ಲೂಕಿನ ನೆರಳೆಗಟ್ಟ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಸಿ.ರಾಮಯ್ಯ (85) ಶನಿವಾರ ಬೆಳಿಗ್ಗೆ ನಿಧನ ಹೊಂದಿದ್ದಾರೆ. ಮೃತರಿಗೆ ಪತ್ನಿ, ಮೂರು ಜನ ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.
ಸಿ.ರಾಮಯ್ಯ ಅವರು 1942ರಲ್ಲಿ ನಡೆದ ಕ್ವಿಟ್ ಇಂಡಿಯಾ ಚಳವಳಿ ಸಂದರ್ಭದಲ್ಲಿ ತಾಲ್ಲೂಕು ಕಚೇರಿ ಮುಂದೆ ನಡೆದ ಹೋರಾಟದಲ್ಲಿ ಭಾಗವಹಿಸಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು. ಸ್ವಾತಂತ್ರ್ಯ ಹೋರಾಟದ ಮುಂಚೂಣಿ ನಾಯಕರಾಗಿದ್ದ ನಾ.ನಂಜುಂಡಯ್ಯ, ಎಚ್.ಮುಗುವಾಳಪ್ಪ ಅವರೊಂದಿಗೆ ನಡೆದ ಹಲವಾರು ಹೋರಾಟಗಳಲ್ಲೂ ಭಾಗಿಯಾಗಿದ್ದರು.
ಈಚಲು ಮರ ಕಡಿಯುವ ಮೂಲಕ ಬ್ರಿಟಿಷ್ ಸರ್ಕಾರದ ವಿರುದ್ದ ಹೋರಾಟಗಳನ್ನು ನಡೆಸಿದ್ದರು. ಪೊಲೀಸರಿಂದ ಬಂಧನಕ್ಕೆ ಒಳಗಾಗಿ 1947 ಅಕ್ಟೋಬರ್ 8ರಿಂದ 14ರ ವರೆಗೆ ಬೆಂಗಳೂರಿನ ಸೆಂಟ್ರಲ್ ಜೈಲಿನಲ್ಲಿದ್ದರು.
ತಾಲ್ಲೂಕು ಆಡಳಿತದ ಪರವಾಗಿ ತಹಶೀಲ್ದಾರ್ ಬಿ.ಎ.ಮೋಹನ್, ಮೃತರಿಗೆ ಪುಷ್ಪಗುಚ್ಛ ಅರ್ಪಿಸಿ ಗೌರವ ಸಲ್ಲಿಸಿದರು. ಮೃತರ ಅಂತ್ಯಕ್ರಿಯೆ ನೇರಳೆಘಟ್ಟ ಗ್ರಾಮದಲ್ಲಿ ಶನಿವಾರ ನಡೆಯಿತು.