ಬಳ್ಳಾರಿ: ‘ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯ ಶಿಫಾರಸುಗಳನ್ನು ಜಾರಿಗೊಳಿಸಬೇಕು’ ಎಂದು ಆಗ್ರಹಿಸಿ ಮಾದಿಗ ದಂಡೋರ ಜಿಲ್ಲಾ ಘಟಕದ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶನಿವಾರ ಧರಣಿ ನಡೆಸಿದರು.
‘ದೇಶಕ್ಕೆ ಸ್ವಾತಂತ್ರ್ಯ ದೊರೆತು 70 ವರ್ಷ ಗತಿಸಿದರೂ ಮಾದಿಗ ಸಮುದಾಯದವರು ಮುಖ್ಯ ವಾಹಿನಿಗೆ ಬರಲು ಸಾಧ್ಯವಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮನ್ನು ತಾವು ಅಹಿಂದ ನಾಯಕರೆಂದು ಕರೆದುಕೊಂಡರೂ ಆಯೋಗದ ವರದಿಯನ್ನು ಅಂಗೀಕರಿಸಲು ಹಿಂಜರಿಯುತ್ತಿದ್ದಾರೆ’ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಆರ್.ಶ್ರೀನಿವಾಸ ಆಕ್ರೋಶ ವ್ಯಕ್ತಪಡಿಸಿದರು.
‘ಎಲ್ಲ ಮಾದಿಗ ಸಂಘಟನೆಗಳು ಒಟ್ಟಾಗಿ ಕಾಂಗ್ರೆಸ್ ಪಕ್ಷದ ವಿರುದ್ಧ ಹೋರಾಟ ರೂಪಿಸಲಿವೆ. ಮುಂದಿನ ದಿನಗಳಲ್ಲಿ ಬೇರೆ ಸಂಘ ಮತ್ತು ಸಂಸ್ಥೆಗಳೊಂದಿಗೆ ಚರ್ಚೆ ನಡೆಸಿ ಬಳ್ಳಾರಿ ಜಿಲ್ಲೆ ಬಂದ್ಗೆ ಕರೆ ನೀಡಲಾಗುವುದು’ ಎಂದು ಎಚ್ಚರಿಸಿದರು.