ಯಾದಗಿರಿ: ‘ರಾಜ್ಯ ಸರ್ಕಾರ ಡಾ.ಡಿ.ಎಂ.ನಂಜುಂಡಪ್ಪ ಸಮಿತಿ ವರದಿಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ಮುಂದಾಗಬೇಕು’ ಎಂದು ಶಾಸಕ ಡಾ.ಎ.ಬಿ. ಮಾಲಕರಡ್ಡಿ ಸರ್ಕಾರವನ್ನು ಒತ್ತಾಯಿಸಿದರು.
ಬೆಳಗಾವಿ ಸುವರ್ಣಸೌಧದಲ್ಲಿ ಶುಕ್ರವಾರ ಪ್ರಶ್ನೋತ್ತರ ಕಲಾಪದಲ್ಲಿ ಈ ಕುರಿತ ತಮ್ಮ ಪ್ರಶ್ನೆಗೆ ಉತ್ತರಿಸಿದ ಯೋಜನಾ ಮತ್ತು ಸಾಂಖ್ಯಿಕ ಸಚಿವ ಎಂ.ಆರ್. ಸೀತಾರಾಂ ಅವರ ಲಿಖಿತ ಉತ್ತರಕ್ಕೆ ಪ್ರತಿಕ್ರಿಯಿಸಿದ ಶಾಸಕರು, ‘ನಮ್ಮ ಪ್ರದೇಶ ತೀರಾ
ಹಿಂದುಳಿದಿರುವುದರಿಂದ ಡಾ.ನಂಜುಂಡಪ್ಪ ವರದಿ ಪ್ರಕಾರ ಅಭಿವೃದ್ಧಿಯನ್ನು ಕೈಗೊಳ್ಳಬೇಕಾದ ಅಗತ್ಯ ಇದೆ. ಅದನ್ನು ತೀರಾ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು’ ಎಂದು ಹೇಳಿದರು.
‘ಯೋಜನೆ 2014–15ರಲ್ಲಿ ವಿಸ್ತರಣೆಯಾದ ನಂತರ ಇಲ್ಲಿಯವರೆಗೆ ಒಟ್ಟು ₹10,567 ಕೋಟಿ ನಿಗದಿಪಡಿಸಿದ್ದು ಇದರಲ್ಲಿ 6,298.15 ಕೋಟಿ ವೆಚ್ಚವಾಗಿದೆ’ ಎಂದು ಸಚಿವರು ತಿಳಿಸಿದ್ದಾರೆ.
ವಿಶೇಷ ಅಭಿವೃದ್ಧಿ ಯೋಜನೆಯಡಿ ಯಾದಗಿರಿ ಜಿಲ್ಲೆಯಲ್ಲಿನ ವಿವಿಧ ಇಲಾಖೆಗಳ ಕಾಮಗಾರಿಗಳಿಗಾಗಿ ₹114.45 ಕೋಟಿ ನಿಗದಿ ಮಾಡಲಾಗಿದೆ ಎಂದು ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
‘ಯೋಜನೆಗಳು ಎಷ್ಟೇ ಇರಲಿ ಅವುಗಳನ್ನು ಪ್ರಾಮಾಣಿವಾಗಿ ಮತ್ತು ಪರಿಣಾಮಕಾರಿಯಾಗಿ ಜಾರಿಯಾದಾಗಲೇ ಹಿಂದುಳಿದ ಪ್ರದೇಶಗಳ ಅಭಿವೃದ್ಧಿ ಸಾಧ್ಯ.’ ಎಂದು ಮಾಲಕರಡ್ಡಿ ಹೇಳಿದರು.