ನವದೆಹಲಿ: ‘ಚುನಾವಣಾ ಪ್ರಕ್ರಿಯೆ ಒಮ್ಮೆ ಆರಂಭವಾದರೆ ಯಾವ ನ್ಯಾಯಾಲಯವೂ ಅದನ್ನು ನಿಲ್ಲಿಸುವಂತಿಲ್ಲ’ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷರ ಹುದ್ದೆಯನ್ನು ಪರಿಶಿಷ್ಟ ಪಂಗಡಕ್ಕೆ ಮೀಸಲಿರಿಸಿರುವ ಸಂಬಂಧ ವ್ಯಾಜ್ಯ ನಡೆಯುತ್ತಿರುವ ಕಾರಣ ಅಧ್ಯಕ್ಷರ ಚುನಾವಣೆಗೆ ತಡೆ ನೀಡಬೇಕು ಎಂದು ಕೋರಿದ್ದ ರಿಟ್ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.
‘ಸದ್ಯ ಪ್ರಕರಣ ಕರ್ನಾಟಕ ಹೈಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿದೆ. ಆದರೆ ಹೈಕೋರ್ಟ್ ಚುನಾವಣೆಗೆ ನೀಡಿದ್ದ ತಡೆಯನ್ನು ಅನೂರ್ಜಿತಗೊಳಿಸಿ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶ ಪ್ರಕರಣ ಇತ್ಯರ್ಥವಾಗುವವರೆಗೂ ಜಾರಿಯಲ್ಲಿರಲಿದೆ’ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಆ ಮೂಲಕ ಅರ್ಜಿಯನ್ನು ತಿರಸ್ಕರಿಸಿದೆ. ಆದರೆ ಪ್ರಕರಣವನ್ನು 2018ರ ಜನವರಿ ಅಂತ್ಯದೊಳಗೆ ಇತ್ಯರ್ಥಪಡಿಸಿ ಎಂದು ಕರ್ನಾಟಕ ಹೈಕೋರ್ಟ್ಗೆ ಸೂಚನೆ ನೀಡಿದೆ.