ನರಗುಂದ: ‘ಮಹದಾಯಿ ವಿವಾದ ಗೋವಾ ಮೊಂಡುತನದಿಂದ ಕಗ್ಗಂಟಾಗಿದೆ. ಮೂರು ರಾಜ್ಯಗಳ ನಡುವಿನ ಜಲವಿವಾದ ಇತ್ಯರ್ಥಪಡಿಸಲು ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕು’ ಎಂದು ಬದಾಮಿ ತಾಲ್ಲೂಕಿನ ಕರಡಿಗುಡ್ಡದ ರೈತ ಮುಖಂಡ ಬಿ.ಎಚ್.ನರಿ ಆಗ್ರಹಿಸಿದರು.
ಪಟ್ಟಣದಲ್ಲಿ ನಡೆದ ಮಹದಾಯಿ ಧರಣಿಯ 862ನೇ ದಿನ ಗುರುವಾರ ಅವರು ಮಾತನಾಡಿದರು. ‘ಪ್ರಧಾನಿ ಮೂರು ರಾಜ್ಯಗಳ ಮುಖ್ಯ ಮಂತ್ರಿಗಳ ಸಭೆ ಕರೆದು, ಸಂಧಾನ ನಡೆಸಿ, ಸಮಸ್ಯೆ ಇತ್ಯರ್ಥಪಡಿಸಬೇಕು. ಈ ನಿಟ್ಟಿನಲ್ಲಿ ಈ ಭಾಗದ ಜನಪ್ರತಿನಿಧಿಗಳು ಅವರ ಮೇಲೆ ಒತ್ತಡ ಹೇರಬೇಕು’ ಎಂದು ಆಗ್ರಹಿಸಿದರು.
ಎಸ್.ಬಿ.ಜೋಗಣ್ಣವರ ಮಾತನಾಡಿ ‘ಉತ್ತರ ಕರ್ನಾಟಕದ ರೈತರ ಸಮಸ್ಯೆಗಳ ಕುರಿತು ಇಲ್ಲಿನ ಜನಪ್ರತಿನಿಧಿಗಳು ಗಮನ ಹರಿಸುತ್ತಿಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸದ ಜನಪ್ರತಿನಿಧಿಗಳು ಯಾಕೆ ಬೇಕು, ಅವರು ರಾಜೀನಾಮೆ ನೀಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.