ಗಂಗಾವತಿ: ರಾಜ್ಯದ ಪೌರಕಾರ್ಮಿಕರು ದೇಶದಲ್ಲಿಯೇ ಹೆಚ್ಚು ವೇತನ ಪಡೆಯುತ್ತಿದ್ದಾರೆ ಎಂದು ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಆರ್.ವೆಂಕಟೇಶ ಹೇಳಿದರು.
ನಗರದ ನಗರಸಭೆ ಸಭಾಂಗಣದಲ್ಲಿ ಭಾನುವಾರ ಸಫಾಯಿ ಕರ್ಮಚಾರಿಗಳ ಆಯೋಗದಿಂದ ನಡೆದ ಕುಂದುಕೊರತೆ ಆಲಿಕೆ ಸಭೆಯಲ್ಲಿ ಮಾತನಾಡಿ, ಇತರ ರಾಜ್ಯಗಳಲ್ಲಿ ಪೌರನೌಕರರು ಕೇವಲ ₨11 ಸಾವಿರ ವೇತನ ಪಡೆಯುತ್ತಿದ್ದಾರೆ. ಇಲ್ಲಿ ₹17 ಸಾವಿರ ವೇತನ ನೀಡಲಾಗುತ್ತಿದೆ. ಪೌರಕಾರ್ಮಿಕರಿಗೆ ಜ್ಯೋತಿ ಸಂಜೀವಿನಿ ಯೋಜನೆ ರೂಪಿಸಲಾಗಿದೆ ಎಂದರು.
ಆಯೋಗದ ಸದಸ್ಯ ನಾರಾಯಣಸ್ವಾಮಿ ಮಾತನಾಡಿ, ಪ್ರತಿಷ್ಠಿತ ಶಾಲೆಗಳಲ್ಲಿ ಪೌರಕಾರ್ಮಿಕರ ಮಕ್ಕಳಿಗೆ ಉಚಿತ ಪ್ರವೇಶ ಕಲ್ಪಿಸಲು 1850 ಸೀಟು ಮೀಸಲಿಡಲಾಗಿದೆ. ಕೇವಲ ಐವತ್ತು ಸೀಟು ಮಾತ್ರ ಭರ್ತಿಯಾಗಿವೆ ಎಂದರು.
ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿಜಯ್, ನಗರಸಭೆ ಪೌರಾಯುಕ್ತ ಖಾಜಾಮೋಹಿನುದ್ದೀನ್, ಎಇಇ ಆರ್.ಆರ್.ಪಾಟೀಲ್, ಕಾರ್ಮಿಕ ನಿರೀಕ್ಷಕ ಹೊನ್ನಪ್ಪ, ಪರಿಸರ ಎಂಜಿನಿಯರ್ ನೇತ್ರಾವತಿ ಇದ್ದರು.