ಬೈಲಹೊಂಗಲ: ಗೋವಿನಜೋಳಕ್ಕೆ ಬೆಂಬಲ ಬೆಲೆ ನೀಡಬೇಕು ಎಂದು ಒತ್ತಾಯಿಸಿ ಭಾರತೀಯ ಕೃಷಿಕ ಸಮಾಜ ಸಂಘಟನೆ ಪದಾಧಿಕಾರಿಗಳು ಉಪವಿಭಾಗಧಿಕಾರಿ ಮೂಲಕ ರಾಜ್ಯಪಾಲರಿಗೆ ಸೋಮವಾರ ಮನವಿ ಸಲ್ಲಿಸಿದರು.
‘ಕೇಂದ್ರ ಸರ್ಕಾರವು ಗೋವಿನಜೋಳಕ್ಕೆ ಬೆಂಬಲ ಬೆಲೆ ನಿಗದಿಪಡಿಸಿದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಖರೀದಿ ಕೇಂದ್ರ ತೆರೆಯದೆ ರೈತರಿಗೆ ಅನ್ಯಾಯ ಮಾಡಿದೆ. ರಾಜ್ಯಪಾಲರು ಮಧ್ಯಪ್ರವೇಶಿಸಿ ಹೆಚ್ಚು ಗೋವಿನಜೋಳ ಬೆಳೆಯುವ ತಾಲ್ಲೂಕು ಕೇಂದ್ರಗಳಲ್ಲಿ ಖರೀದಿ ಕೇಂದ್ರ ತೆರೆಯುವಂತೆ ಆದೇಶಿಸಬೇಕು’ ಎಂದು ಒತ್ತಾಯಿಸಿದರು.
ರಾಜ್ಯ ಸಂಘಟನಾ ಕಾರ್ಯದರ್ಶಿ ಮಹಾಂತೇಶ ಕಮತ ಮಾತನಾಡಿ, ‘ಐದು ವರ್ಷಗಳಿಂದ ಸರಿಯಾಗಿ ಮಳೆ ಬೀಳದೆ ಪ್ರಕೃತಿ ವಿಕೋಪದಿಂದ ರೈತರ ಪರಿಸ್ಥಿತಿ ಚಿಂತಾಜನಕವಾಗಿದೆ. ಗೋವಿನಜೋಳಕ್ಕೆ ₹ 1,450 ಬೆಂಬಲೆ ಬೆಲೆ ಘೋಷಿಸಿದೆ. ರಾಜ್ಯ ಸರ್ಕಾರ ಅದಕ್ಕೆ ಪ್ರೋತ್ಸಾಹಧನ ನೀಡಿ ಖರೀದಿಸಬೇಕು. ಇಲ್ಲವಾದರೆ ತೀವ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾ ಘಟಕದ ಅಧ್ಯಕ್ಷ ಈರಪ್ಪ ಹುಬ್ಬಳ್ಳಿ, ಉಪಾಧ್ಯಕ್ಷ ಸೋಮಲಿಂಗಪ್ಪ ಕೋಟಗಿ, ಕಾರ್ಯದರ್ಶಿ ಶಂಕರಗೌಡ ಪಾಟೀಲ, ಮುಖಂಡರಾದ ರಮೇಶ ತೋಟಗಿ, ಸುರೇಶ ಹೋಳಿ, ಮುಗನಗೌಡ ಪಾಟೀಲ ಇದ್ದರು.