ರಾಮದುರ್ಗ: ‘ಬಡವರ, ದೀನ ದಲಿತರ ಮತ್ತು ರೈತರ ಹಿತ ಕಾಪಾಡುವಲ್ಲಿ ರಾಷ್ಟ್ರೀಯ ಪಕ್ಷಗಳು ವಿಫಲವಾಗಿವೆ. ಮುಂಬರುವ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷವಾದ ಜೆಡಿಎಸ್ಗೆ ಮತ ನೀಡಿ, ಅಧಿಕಾರಕ್ಕೆ ತರಬೇಕು’ ಎಂದು ಪಕ್ಷದ ಜಿಲ್ಲಾ ಘಟಕದ ಉಪಾಧ್ಯಕ್ಷ ಎಂ.ಜಾವೀದ್ ಹೇಳಿದರು.
ತಾಲ್ಲೂಕಿನ ಮುದೇನೂರ ಗ್ರಾಮದಲ್ಲಿ ಸೋಮವಾರ ’ಮನೆ ಮನೆಗೆ ಕುಮಾರಣ್ಣ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ‘ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಜಾರಿಗೊಳಿಸಿದ್ದ ಯೋಜನೆಗಳ ಬಗ್ಗೆ ಕಾರ್ಯಕರ್ತರು ಮನೆಮನೆಗೆ ತೆರಳಿ ಪ್ರಚಾರ ಮಾಡಬೇಕು’ ಎಂದರು.
‘ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ ಬಹುಮತ ದೊರೆತರೆ ಕುಮಾರಸ್ವಾಮಿ ಪುನಃ ಮುಖ್ಯಮಂತ್ರಿಯಾಗಲಿದ್ದಾರೆ. ಉತ್ತರ ಕರ್ನಾಟಕದ ಹಲವಾರು ಸಮಸ್ಯೆಗಳಿಗೆ ಮುಕ್ತಿ ದೊರೆಯಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಶಿವಣ್ಣ ಅಂಗಡಿ, ರೈತ ಘಟಕದ ಅಧ್ಯಕ್ಷ ಬಸವರಾಜ ಕರಿಗಾರ, ಮುದೇನೂರ ಪಂಚಾಯ್ತಿ ಉಪಾಧ್ಯಕ್ಷ ಹುಸೇನಸಾಬ ಬಡೇಖಾನ, ಈರಪ್ಪ ಬಲ್ಕಿ, ಬಸವರಾಜ ಜಾಯಿ ಇದ್ದರು.