ಆನೇಕಲ್: ತಾಲ್ಲೂಕಿನಲ್ಲಿರುವ ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸಿಕೊಡುವ ಸಲುವಾಗಿ ವಿವಿಧ ಕೈಗಾರಿಕೆಗಳು ಹಾಗೂ ಕಂಪನಿಗಳೊಂ
ದಿಗೆ ಸಮಾಲೋಚನೆ ನಡೆಸಿ ಬೃಹತ್ ಉದ್ಯೋಗ ಮೇಳವನ್ನು ಡಿಸೆಂಬರ್ 2ರಂದು ಆನೇಕಲ್ ತಾಲ್ಲೂಕಿನ ಸರ್ಜಾಪುರದಲ್ಲಿ ಆಯೋಜಿಸಲಾಗಿದೆ ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು. ಅವರು ಸೂರ್ಯಸಿಟಿಯ ಶಾಸಕರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
8ನೇ ತರಗತಿಯಿಂದ ಮೇಲ್ಪಟ್ಟು ಯಾವುದೇ ವಿದ್ಯಾರ್ಹತೆ ಇರುವವರಿಗೆ ಉಚಿತ ಕೌಶಲ್ಯ ತರಬೇತಿ ಹಾಗೂ ಉದ್ಯೋಗಕ್ಕೆ ಆಯ್ಕೆ ಮಾಡಲಾಗುವುದು. 150ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗಿಗಳಾಗಲು ಒಪ್ಪಿಗೆ ಸೂಚಿಸಿವೆ. ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಹಾಗೂ ರಾಜೀವ್ ಗಾಂಧಿ ಚೈತನ್ಯ ಯೋಜನೆಯಡಿಯಲ್ಲಿ ತಾಲ್ಲೂಕಿನ ಯುವಕ, ಯುವತಿಯರಿಗೆ ತರಬೇತಿ, ಮಾರ್ಗದರ್ಶನ ಹಾಗೂ ಉದ್ಯೋಗಕ್ಕೆ ನೇರ ಆಯ್ಕೆ ಮಾಡುವ ಸಲುವಾಗಿ ಮೇಳ ಆಯೋಜಿಸಿದೆ ಎಂದರು.
ಆನೇಕಲ್ ತಾಲ್ಲೂಕಿನಲ್ಲಿ ವೀರಸಂದ್ರ, ಹೆಬ್ಬಗೋಡಿ, ಅತ್ತಿಬೆಲೆ, ಎಲೆಕ್ಟ್ರಾನಿಕ್ಸಿಟಿ, ಜಿಗಣಿ ಸೇರಿದಂತೆ ಐದು ಕೈಗಾರಿಕಾ ಪ್ರದೇಶಗಳಿವೆ. ಸಾವಿರಾರು ಕಂಪನಿಗಳು ಕಾರ್ಯನಿರ್ವಹಿಸುತ್ತಿದ್ದು ಉದ್ಯೋಗಿಗಳ ಅವಶ್ಯಕತೆ ಹೆಚ್ಚಾಗಿದೆ.
ಸೂಕ್ತ ವೇದಿಕೆಯಿಲ್ಲದೇ ಉದ್ಯೋಗಕ್ಕಾಗಿ ಹುಡುಕಾಟ ನಡೆಸಿದ್ದ ಯುವಕರು ಹಾಗೂ ಅರ್ಹರಿಗೆ ವೇದಿಕೆ ಕಲ್ಪಿಸಿಕೊಟ್ಟು ಉದ್ಯೋಗ ದೊರೆಯುವಂತೆ ಮಾಡುವ ಸಲುವಾಗಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಅಂದಾಜು 5 ಸಾವಿರ ಮಂದಿಗೆ ಉದ್ಯೋಗ ಕಲ್ಪಿಸಬೇಕೆಂಬ ಗುರಿ ಹೊಂದಲಾಗಿದ್ದು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ಪ್ರಚಾರ ಸಮಿತಿ ಅಧ್ಯಕ್ಷ ಬನಹಳ್ಳಿ ರಾಮಚಂದ್ರರೆಡ್ಡಿ ಮಾತನಾಡಿ, ತಾಲ್ಲೂಕಿನಲ್ಲಿ ಮೊದಲ ಬಾರಿಗೆ ಉದ್ಯೋಗ ಮೇಳ ನಡೆಯುತ್ತಿದೆ. ಶಾಸಕ ಬಿ.ಶಿವಣ್ಣ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಉದ್ಯೋಗ ಮೇಳವನ್ನು ಶನಿವಾರ ಬೆಳಿಗ್ಗೆ ಗೃಹ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸುವರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ಸಂಸದ ಡಿ.ಕೆ.ಸುರೇಶ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಮುನಿರಾಜು, ವಿಧಾನ ಪರಿಷತ್ ಸದಸ್ಯರಾದ ಎಂ.ನಾರಾಯಣಸ್ವಾಮಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮುನಿರತ್ನಮ್ಮ ನಾರಾಯಣ್ ಪಾಲ್ಗೊಳ್ಳುವರು ಎಂದರು.
ಗ್ರಾ.ಪಂ.ಅಧ್ಯಕ್ಷ ಆರ್.ಕೆ.ಕೇಶವರೆಡ್ಡಿ, ಮುಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮುರುಗೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಜಣ್ಣ, ಚಂದ್ರಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.