ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನುಕಂಪದಿಂದ ಏಳಿಗೆಯಾಗುವುದಿಲ್ಲ

Last Updated 4 ಡಿಸೆಂಬರ್ 2017, 7:21 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಅಂಗವಿಕಲರು ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡಾಗ ಸಬಲರಾಗುತ್ತಾರೆ ವಿನಾ ಅನುಕಂಪದಿಂದ ಅವರ ಏಳಿಗೆಯಾಗುವುದಿಲ್ಲ’ ಎಂದು ಶಾಸಕ ಡಾ.ಕೆ.ಸುಧಾಕರ್‌ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರದಲ್ಲಿ ಭಾನುವಾರ ಆಯೋಜಿಸಿದ್ದ ‘ವಿಶ್ವ ಅಂಗವಿಕಲರ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ದೇಶದಲ್ಲಿ ಸುಮಾರು 3 ಕೋಟಿ ಜನರು ಅಂಗವಿಕಲರಿದ್ದಾರೆ. ಇದರಲ್ಲಿ ಹುಟ್ಟಿನಿಂದ, ಅಪಘಾತ, ಅನಾರೋಗ್ಯಕ್ಕೆ ಒಳಗಾಗಿ ಒಂದಲ್ಲ ಒಂದು ರೀತಿಯಲ್ಲಿ ಅಂಗಾಂಗಳ ಹೀನತೆ, ದೌರ್ಬಲ್ಯದಿಂದ ಅಂಗವಿಕಲರಾಗಿದ್ದಾರೆ' ಎಂದರು.

‘ಸಮಾಜದಲ್ಲಿ ಅಂಗವಿಕಲರನ್ನು ಸಮಾನರಾಗಿ ಕಾಣುವುದು ಎಲ್ಲರ ಕರ್ತವ್ಯವಾಗಬೇಕು. ಪ್ರತಿಯೊಬ್ಬ ಅಂಗವಿಕಲರಿಗೆ ಸರ್ಕಾರದಿಂದ ಸಿಗಬೇಕಾದ ಎಲ್ಲ ಸವಲತ್ತುಗಳನ್ನು ನೀಡಲು ಎಲ್ಲ ಇಲಾಖೆ ಪ್ರಾಮಾಣಿಕ ಕೆಲಸ ಮಾಡಬೇಕು’ ಎಂದು ತಿಳಿಸಿದರು.

‘ಅಂಗವೈಕಲ್ಯ ಹೊಂದಿದ ಮಾತ್ರಕ್ಕೆ ಯಾರೂ ಧೃತಿಗೆಡಬಾರದು. ಮುನ್ನುಗ್ಗಿ ಕೆಲಸ ಮಾಡುವ ಛಲ ಬೆಳೆಸಿಕೊಳ್ಳಬೇಕು. ದೃಷ್ಟಿ ಕಾಣದವರು ಸಂಗೀತ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಉನ್ನತ ಸ್ಥಾನಕ್ಕೆ ಏರಿರುವವರು ಅನೇಕರಿದ್ದಾರೆ’ ಎಂದರು.

‘ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಪಡೆದುಕೊಳ್ಳಬೇಕು. ತರಬೇತಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಬಲರಾಗುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಸೇರುವ ಕೆಲಸ ಮಾಡಬೇಕು’ ಎಂದು ಹೇಳಿದರು.

‘ಸರ್ಕಾರಗಳು ಅಂಗವಿಕಲರಿಗೆ ಆತ್ಮ ವಿಶ್ವಾಸ ತುಂಬುವ ಜತೆಗೆ ಉತ್ತಮ ಜೀವನ ನಡೆಸಲು ಬದುಕು ಕಟ್ಟಿಕೊಡಬೇಕು. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಉದ್ಯೋಗಗಳಲ್ಲಿ ಅಂಗವಿಕರಿಗಾಗಿ ‘ಸಿ’ ಮತ್ತು ‘ಡಿ’ ದರ್ಜೆಯಲ್ಲಿ ಶೇ 5ರಷ್ಟು ಮೀಸಲಾತಿ ಕಲ್ಪಿಸಿದ್ದಾರೆ. ಜತೆಗೆ ‘ಎ’ ಮತ್ತು ‘ಬಿ’ ದರ್ಜೆಗಳಲ್ಲಿ ಶೇ 3 ರಷ್ಟು ಮೀಸಲೀರಿಸಿದ್ದಾರೆ’ ಎಂದು ಹೇಳಿದರು.

‘ಜಿಲ್ಲೆಯಲ್ಲಿ ಶೇ 80ರಿಂದ 90 ರಷ್ಟು ಅಂಗವಿಕರಿಗೆ ಮಾಸಾಶನ ನೀಡಲಾಗುತ್ತಿದೆ. ಮಿಕ್ಕುಳಿದವರನ್ನು ಪಟ್ಟಿ ತಯಾರಿಸಿ ಅವರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸಲಾಗುವುದು. ಕಳೆದ ವರ್ಷ ತಾಲ್ಲೂಕಿನಲ್ಲಿ 108 ಸ್ಕೂಟರ್‌ಗಳನ್ನುವಿತರಿಸಲಾಗಿತ್ತು’ ಎಂದು ತಿಳಿಸಿದರು.

‘ಕಳೆದ ನಾಲ್ಕೂವರೆ ವರ್ಷದಲ್ಲಿ 8 ಸಾವಿರ ಮನೆಗಳನ್ನು ಕ್ಷೇತ್ರಕ್ಕೆ ತರಲಾಗಿದೆ. ಈ ವರ್ಷದಲ್ಲಿ ಅಂಗವಿಕಲರಿಗೆ ವಸತಿ ಕಲ್ಪಿಸಲು ಮೊದಲ ಆದ್ಯತೆ ನೀಡಲಾಗುವುದು. ಜತೆಗೆ ಮುಂದಿನ ದಿನಗಳಲ್ಲಿ ಅಂಗವಿಕಲರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ಆಯೋಜಿಸಿ ಉಚಿತ ಸಾಧನ, ಸಲಕರಣಿ ನೀಡಲಾಗುವುದು’ ಎಂದು ತಿಳಿಸಿದರು.

ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವಿಶೇಷ ಸಾಧನೆ ಮಾಡಿದ ಅಂಗವಿಕಲರಿಗೆ ಸನ್ಮಾನಿಸಲಾಯಿತು. ಜಿಲ್ಲೆಯ ವಿವಿಧ ಕಡೆಗಳಿಂದ ಆಗಮಿಸಿದ ಅಂಗವಿಕಲ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಯಲುವಹಳ್ಳಿ ರಮೇಶ್‌, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್‌.ಎಂ.ಮುನಿಯಪ್ಪ, ಪ್ರಭಾರಿ ಜಿಲ್ಲಾಧಿಕಾರಿ ಕೆ.ಎನ್‌.ಅನುರಾಧಾ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವಣ್ಣರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಭಾರಿ ಉಪನಿರ್ದೇಶಕ ಪದ್ಮರಾಜ್‌, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಕೆ.ವಿ.ಜ್ಯೋತಿ, ನಗರಸಭೆ ಸದಸ್ಯ ದಾಸ್‌, ಆನಂದ್‌ರೆಡ್ಡಿ, ಮುಖಂಡರಾದ ಜೆಸಿಬಿ ಮಂಜುನಾಥ್‌ ಇದ್ದರು.

* * 

ಅಂಗವಿಕಲರಿಗೆ ಸಾಮಾಜಿಕ ಭದ್ರತೆ ಹಾಗೂ ಇನ್ನಷ್ಟು ಆತ್ಮಸ್ಥೆರ್ಯ ತುಂಬುವ ದೃಷ್ಟಿಯಿಂದ ವಸತಿ ಕಲ್ಪಿಸಲು ಮೊದಲ ಆದ್ಯತೆ ಕಲ್ಪಿಸಲಾಗುವುದು. ಡಾ.ಕೆ.ಸುಧಾಕರ್‌, ಶಾಸಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT