ಮಂಡ್ಯ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹಾಗೂ ಸಂಸದ ಪ್ರತಾಪ ಸಿಂಹ ಅವರು ರಾಜ್ಯದಲ್ಲಿ ಕೋಮು ಸಾಮರಸ್ಯ ಕದಡಿ ಅಶಾಂತಿ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿ ಜೆಡಿಯು ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಸ್.ಗೌಡ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೋಮವಾರ ದೂರು ನೀಡಿದ್ದಾರೆ.
‘ಅಮಿತ್ ಷಾ ಅವರ ಪ್ರೇರಣೆಯಿಂದಾಗಿ ಸಂಸದ ಪ್ರತಾಪ ಸಿಂಹ ಹುಣಸೂರಿನಲ್ಲಿ ಹನುಮ ಜಯಂತಿ ಆಚರಣೆ ವೇಳೆ ಅಶಾಂತಿ ಸೃಷ್ಟಿಸಿದ್ದಾರೆ. ಭದ್ರತೆಗಾಗಿ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಮೇಲೆ ಕಾರು ಹತ್ತಿಸಿ ಗೂಂಡಾ ಪ್ರವೃತ್ತಿ ಪ್ರದರ್ಶಿಸಿದ್ದಾರೆ.
ರಾಜಕೀಯ ಹೋರಾಟ ಎಂದರೆ ದೊಂಬಿ, ಗಲಭೆ ಆಗಬೇಕು. ಲಾಠಿ ಚಾರ್ಚ್, ಗೋಲಿಬಾರ್ ನಡೆಯಬೇಕು. ಆಗಲೇ ಹೋರಾಟ ಸಾರ್ಥಕವಾಗುತ್ತದೆ ಎಂದು ಪ್ರತಾಪ ಸಿಂಹ ಅವರಿಗೆ ಅಮಿತ್ ಷಾ ಸೂಚನೆ ನೀಡಿದ್ದಾರೆ. ಈ ಕುರಿತು ಸಿಂಹ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ' ಎಂದು ದೂರಿನಲ್ಲಿ ತಿಳಿಸಿದ್ದಾರೆ.
‘ಹಿಂದೆ ಹನುಮ ಜಯಂತಿ ಆಚರಿಸದ ಪ್ರತಾಪ್ ಸಿಂಹ, ಈ ಬಾರಿ ಆಚರಣೆ ಮಾಡಿರುವುದು ಅನುಮಾನಾಸ್ಪದವಾಗಿದೆ. ಶಾಂತಿ ಕದಡುವ ಸಲುವಾಗಿ ಗೂಂಡಾ ವರ್ತನೆ ತೋರಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ದೂರು ನೀಡಿದ್ದೇನೆ’ ಎಂದು ಅವರು ಹೇಳಿದರು.