ಪಣಜಿ: ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಡಿಐಜಿ ವಿಮಲ್ ಕುಮಾರ್ ಗುಪ್ತಾ ಅವರನ್ನು ಗೋವಾ ಸರ್ಕಾರವು ಸೇವೆಯಿಂದ ಬಿಡುಗಡೆ ಮಾಡಿದೆ.
ಇದೇ 5ರಂದು ಅವರನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ ಮತ್ತು ಕೇಂದ್ರ ಗೃಹ ಸಚಿವಾಲಯದ ಎದುರು ಹಾಜರಾಗುವಂತೆ ನಿರ್ದೇಶಿಸಲಾಗಿದೆ.
‘ವಿಮಲ್ ಅವರನ್ನು ರಾಜ್ಯ ಸರ್ಕಾರದ ಸೇವೆಯಿಂದ ಬಿಡುಗಡೆ ಮಾಡಲಾಗಿದೆ. ಹಾಗೆಂದ ಮಾತ್ರಕ್ಕೆ ಅವರನ್ನು ನಿರ್ದೋಷಿ ಎನ್ನಲಾಗುವುದಿಲ್ಲ. ಹಿರಿಯ ಅಧಿಕಾರಿಗಳಿಂದ ಇಲಾಖಾ ತನಿಖೆ ನಡೆಯಲಿದೆ’ ಎಂದು ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಹೇಳಿದ್ದಾರೆ.
ತಮ್ಮ ಮೇಲಿನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ವಿಮಲ್ ಅವರಿಗೆ ಲಂಚದ ಆಮಿಷ ನೀಡಿದ್ದಾರೆ ಎಂಬ ಆರೋಪದ ಮೇಲೆ ಒಬ್ಬ ಮಹಿಳಾ ಸಬ್ ಇನ್ಸ್ಪೆಕ್ಟರ್ ಹಾಗೂ ಕಾನ್ಸ್ಟೆಬಲ್ ಒಬ್ಬರನ್ನು ಕಳೆದ ವಾರ ಅಮಾನತು ಮಾಡಲಾಗಿದೆ.