ಶಿರಸಿ: ಮಂಗಳವಾರ ಇಡೀ ದಿನ ಪ್ರಕ್ಷುಬ್ಧ ಸ್ಥಿತಿಯಲ್ಲಿದ್ದ ನಗರ ಬುಧವಾರ ಸಹಜ ಸ್ಥಿತಿಗೆ ಮರಳಿದೆ. ಶಾಲೆ, ಕಾಲೇಜುಗಳು ಆರಂಭಗೊಂಡಿವೆ. ಬಸ್ ಸಂಚಾರ ಎಂದಿನಂತೆ ಮುಂದುವರಿದಿದೆ. ವ್ಯಾಪಾರಿಗಳು ಅಂಗಡಿ ಬಾಗಿಲು ತೆರೆದು ವ್ಯಾಪಾರ ಆರಂಭಿಸಿದ್ದಾರೆ.
ಪೊಲೀಸರು ನಗರದ ಗಲ್ಲಿಗಲ್ಲಿಗಳಲ್ಲಿ ಬೀಡು ಬಿಟ್ಟಿದ್ದಾರೆ.
ಹೊನ್ನಾವರದ ಯುವಕ ಪರೇಶ ಮೇಸ್ತ ಸಾವಿನ ಪ್ರಕರಣದ ತನಿಖೆಯನ್ನು ಸಮರ್ಪಕವಾಗಿ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿ, ಬಿಜೆಪಿ ಹಾಗೂ ಹಿಂದೂ ಜಾಗರಣ ವೇದಿಕೆ, ಭಜರಂಗ ದಳ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದರು.
ಸಭೆ, ಸಮಾರಂಭಗಳನ್ನು ನಡೆಸಲು ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಪ್ರತಿಭಟನಾಕಾರರು ಪಟ್ಟು ಹಿಡಿದರು. ಪೊಲೀಸರು ಇದಕ್ಕೆ ಅವಕಾಶ ನೀಡಲಿಲ್ಲ ಎಂಬ ಕಾರಣ ಮುಂದಿಟ್ಟು ಕಲ್ಲು ತೂರಾಟ ಆರಂಭಿಸಿದ ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು.
ನಂತರ ನಗರದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಕಲ್ಲು ತೂರಾಟ ನಡೆದಿತ್ತು. ಮುಸ್ಲಿಂ ಸಮುದಾಯದ ವ್ಯಕ್ತಿಗಳ ಅಂಗಡಿಗಳ ಮೇಲೆ ಕಲ್ಲು ಎಸೆದು ಹಾನಿಗೊಳಿಸಲಾಗಿತ್ತು.