ಸಿಂಧನೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜ್ಯದಾದ್ಯಂತ ನಡೆಯುತ್ತಿರುವ ಪರಿವರ್ತನಾ ಯಾತ್ರೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷೆ ಡಿ.ಪುರಂದರೇಶ್ವರಿ ಅಭಿಪ್ರಾಯಪಟ್ಟರು.
ಇಲ್ಲಿಗೆ ಸಮೀಪದ ಪಗಡದಿನ್ನಿ ಕ್ಯಾಂಪಿನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ಸುರಪುರ, ಶಹಾಪುರ, ಯಾದಗಿರಿ ಸೇರಿದಂತೆ ಹೈದರಾಬಾದ್ ಕರ್ನಾಟಕದ ಭಾಗದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನ ಸೇರಿದ್ದರು’ ಎಂದರು.
‘ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ತುಂಗಭದ್ರಾ ಎಡದಂಡೆ ನಾಲೆಯನ್ನು ₹1,295 ಕೋಟಿ ವೆಚ್ಚದಲ್ಲಿ ಆಧುನೀಕರಣಗೊಳಿಸಿದ್ದಾರೆ. ನಂಜುಂಡಪ್ಪ ವರದಿಯ ಶಿಫಾರಸಿನಂತೆ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ನೀಡಿದ್ದರು. ಅಲ್ಲದೆ, ದೇಶದಲ್ಲಿಯೇ ಮೊದಲ ಬಾರಿಗೆ ಪ್ರತ್ಯೇಕ ಕೃಷಿ ಬಜೆಟ್ ಮಂಡನೆ ಮಾಡಿದ ಕೀರ್ತಿ ಅವರಿಗೆ ಸಲ್ಲತ್ತದೆ’ ಎಂದು ಹೇಳಿದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿರುವ ಕೆ.ಜೆ.ಜಾರ್ಜ್, ಡಿ.ಕೆ.ಶಿವಕುಮಾರ ಸೇರಿದಂತೆ ಇನ್ನಿತರ ಸಚಿವರು ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದು, ಸಿ.ಎಂ ಆ ಪ್ರಕರಗಳನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ’ ಎಂದು ಆರೋಪಿಸಿದರು.
ಕೆ.ಎಸ್.ಈಶ್ವರಪ್ಪ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಮುಖಂಡರಾದ ಅಶೋಕ ಗಸ್ತಿ ರಾಯಚೂರು, ಕೊಲ್ಲಾ ಶೇಷಗಿರಿರಾವ್, ನಲ್ಲ ವೆಂಕಟೇಶ್ವರರಾವ್, ಕಮ್ಮ ರಾಮಕೃಷ್ಣ, ಭಾಸ್ಕರ್ ನಕ್ಕಂಟಿ, ಶೋಬಾನಬಾಬು, ನಲ್ಲ ತಿಮ್ಮರಾಜು, ಟಿ.ಸುಬ್ಬಾರಾವ್, ಸಂದೀಪ ಪಾಟೀಲ ಸುದ್ದಿಗೋಷ್ಠಿಯಲ್ಲಿ ಇದ್ದರು.