ಮಡಿಕೇರಿ: ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಸೋಮವಾರ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ವಿಜಯೋತ್ಸವ ಆಚರಿಸಿದರು. ನಗರದ ಚೌಕಿಯಲ್ಲಿ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಪರವಾಗಿ ಜಯಘೋಷ ಕೂಗಿ ಹರ್ಷ ವ್ಯಕ್ತಪಡಿಸಿದರು.
ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಇದೊಂದು ಬಿಜೆಪಿಗೆ ದಿಗ್ವಿಜಯ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ. ಈ ಫಲಿತಾಂಶ ದಿಕ್ಸೂಚಿ ಆಗಲಿದೆ. ನೋಟು ಅಮಾನ್ಯೀಕರಣ ಹಾಗೂ ಜಿಎಸ್ಟಿ ಅಂತಹ ಮಹತ್ವದ ನಿರ್ಧಾರಗಳು ಪಕ್ಷ ಕೈಹಿಡಿದಿವೆ ಎಂದು ಹರ್ಷ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ನ ಆಡಳಿತ ಶೂನ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರಿಗೆ ಜನರು ಬೆಂಬಲ ನೀಡುತ್ತಿದ್ದಾರೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಮಾತನಾಡಿ, ನಿರೀಕ್ಷಿಗೂ ಮೀರಿದ ಗೆಲುವು ಬಿಜೆಪಿ ಲಭಿಸಿದೆ. ಕೇಂದ್ರದ ಜನಪರ ಯೋಜನೆಗಳು ಜನರು ಮೆಚ್ಚುಕೊಂಡಿದ್ದಾರೆ ಎಂಬುದಕ್ಕೆ ಉತ್ತಮ ನಿದರ್ಶನ ಎಂದು ಹೇಳಿದರು.
ಬಿಜೆಪಿ ನಗರ ಘಟಕದ ಅಧ್ಯಕ್ಷ ಮಹೇಶ್ ಜೈನಿ, ನಗರಸಭೆ ಸದಸ್ಯ ಕೆ.ಎಸ್. ರಮೇಶ್, ಅನಿತಾ ಪೂವಯ್ಯ, ಮಡಿಕೇರಿ ತಾಲ್ಲೂಕು ಅಧ್ಯಕ್ಷ ತಳೂರು ಕಿಶೋರ್ ಕುಮಾರ್, ವಿರಾಜಪೇಟೆ ತಾಲ್ಲೂಕು ಅಧ್ಯಕ್ಷ ಅರುಣ್ ಭೀಮಯ್ಯ ಹಾಜರಿದ್ದರು.
ಜಿಲ್ಲೆಯಾದ್ಯಂತ ಸಂಭ್ರಮಾಚರಣೆ: ಕುಶಾಲನಗರ, ಸೋಮವಾರಪೇಟೆ, ವಿರಾಜಪೇಟೆ, ಗೋಣಿಕೊಪ್ಪಲು ಹಾಗೂ ನಾಪೋಕ್ಲು ಸೇರಿದಂತೆ ವಿವಿಧ ಪಟ್ಟಣಗಳಲ್ಲಿ ಗೆಲುವಿನ ಸಂಭ್ರಮಾಚರಣೆ ಆಚರಿಸಿದರು.