ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದೂಗಳ ಹತ್ಯೆ ಖಂಡಿಸಿ ಪ್ರತಿಭಟನೆ

Last Updated 20 ಡಿಸೆಂಬರ್ 2017, 6:13 IST
ಅಕ್ಷರ ಗಾತ್ರ

ಯಾದಗಿರಿ: ರಾಜ್ಯದಲ್ಲಿ ನಡೆಯುತ್ತಿರುವ ಹಿಂದೂ ಕಾರ್ಯಕರ್ತರ ಹತ್ಯೆ ಪ್ರಕರಣಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿ ಹಿಂದೂ ಹಿತರಕ್ಷಣಾ ವೇದಿಕೆ ಮಂಗಳವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.

ನಗರದ ಹನುಮಾನ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಸುಭಾಶ್ಚಂದ್ರ ಬೋಸ್, ಶಾಸ್ತ್ರಿವೃತ್ತ ಮಾರ್ಗವಾಗಿ ತಹಶೀಲ್ದಾರ್‌ ಕಚೇರಿಗೆ ಬಂತು. ಹಿಂದೂ ಕಾರ್ಯಕರ್ತರ ಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸಬೇಕು ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ರಾಜ್ಯದಲ್ಲಿ ನಾಲ್ಕೂವರೆ ವರ್ಷಗಳಲ್ಲಿ ವಿವಿಧ ಹಿಂದೂ ಸಂಘಟನೆಗಳಿಗೆ ಸೇರಿದ 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬರ್ಬರವಾಗಿ ಹತ್ಯೆ ನಡೆದಿರುವುದು ಆಘಾತಕಾರಿ ಸಂಗತಿಯಾಗಿದೆ. ರಾಜ್ಯದಾದ್ಯಂತ ನಡೆದಿರುವ ಎಲ್ಲ ಹಿಂದೂ ಕಾರ್ಯಕರ್ತರ ಹತ್ಯೆ ಒಂದೇ ಮಾದರಿಯಲ್ಲಿ ಇವೆ. ಹತ್ಯೆ ಹಿಂದೆ ಐಎಸ್‌ಐಎಸ್, ಇಂಡಿಯನ್ ಮಜಾಹಿದ್ದೀನ್‌ನಂತಹ ಭಯೋತ್ಪಾದಕ ಸಂಘಟನೆ, ಕೆಎಫ್‌ಡಿ, ಪಿಎಫ್‌ಐ ಮತ್ತು ಎಸ್‌ಡಿಪಿಐ ನಂತಹ ಮತೀಯ ಸಂಘಟನೆಗಳ ಸಕ್ರಿಯ ಬೆಂಬಲ ಇರುವ ಆರೋಪಗಳು ಕೇಳಿ ಬರುತ್ತಿವೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು.

‘ಹಿಂದೂ ಕಾರ್ಯಕರ್ತರು ಮತ್ತು ಮುಖಂಡರಿಗೆ ಜೀವಭದ್ರತೆ ಒದಗಿಸಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಹತ್ಯಾಪ್ರಕರಣಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕು. ಎಸ್‌ಡಿಪಿಐ, ಕೆಎಫ್‌ಡಿ, ಪಿಎಫ್‌ಐನಂತಹ ಮತೀಯ ಸಂಘಟನೆಗಳನ್ನು ರಾಜ್ಯದಲ್ಲಿ ನಿಷೇಧಿಸಬೇಕು’ ಎಂದು ಆಗ್ರಹಿಸಿದರು.

ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಚಂದ್ರಶೇಖಗೌಡ ಮಾಗನೂರ, ಡಾ.ಶರಣಭೂಪಾಲರಡ್ಡಿ ನಾಯ್ಕಲ್, ಸಿದ್ದಣ್ಣಗೌಡ ಕಾಡಮನೋರ್, ಡಿ.ಎಂ.ವೆಂಕಟೇಶ, ನಾಗರತ್ನಾ ಕುಪ್ಪಿ, ವೀಣಾ ಮೋದಿ, ತಿಪ್ಪಣ್ಣ ಕೋನಿಮನಿ, ಸುರೇಶ ಆಕಾಳ, ಶಿವು ದಾಸನಕೇರಿ, ಜಿಲ್ಲಾ ಸಂಚಾಲಕ ಅಂಬಯ್ಯಾ ಶಾಬಾದಿ, ಮಲ್ಲಿಕಾರ್ಜುನ ಭಂಗಿ, ರಮೇಶ ಕೋಟಿಮನಿ, ಸಾಯಿಬಣ್ಣ ಚಂಡರಕಿ, ರಾಘವೇಂದ್ರ ಗೌವಳಿ, ಬನ್ನಪ್ಪ, ಶಿವಕುಮಾರ, ಅಂಬರೇಶ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

* * 

ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆ ಒದಗಿಸುವಲ್ಲಿ ಸರ್ಕಾರ ವಿಫಲಗೊಂಡಿದೆ. ಮತೀಯ ಸಂಘಟನೆಗಳಿಗೆ ಪರೋಕ್ಷ ಬೆಂಬಲ ನೀಡಿದೆ.
ಡಾ.ಶರಣಭೂಪಾಲರಡ್ಡಿ ನಾಯ್ಕಲ್ ಬಿಜೆಪಿ ಮುಖಂಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT