ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದಾಯಿ ಸಮಸ್ಯೆ ಶೀಘ್ರದಲ್ಲೇ ಇತ್ಯರ್ಥ

Last Updated 20 ಡಿಸೆಂಬರ್ 2017, 8:34 IST
ಅಕ್ಷರ ಗಾತ್ರ

ರೋಣ: ‘ಶೀಘ್ರದಲ್ಲೇ ಮಹದಾಯಿ, ಕಳಸಾ– ಬಂಡೂರಿ ಸಮಸ್ಯೆಯನ್ನು ಇತ್ಯರ್ಥಪಡಿಸಲಾಗುವುದು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಪುನರುಚ್ಚರಿಸಿದರು. ಬಿಜೆಪಿ ಪರಿವರ್ತನಾ ಯಾತ್ರೆಯ ಅಂಗವಾಗಿ ಮಂಗಳವಾರ ರೋಣ ಪಟ್ಟಣದ ಪಲ್ಲೇದರವರ ಜಮೀನಿನಲ್ಲಿ ನಡೆದ ಬಹಿರಂಗ ಸಮಾವೇಶದಲ್ಲಿ ಅವರು ಮಾತನಾಡಿದರು.

‘ಮಹದಾಯಿ ನೀರಿಗಾಗಿ ಹೋರಾಟ ನಡೆಸಿದ ಅಮಾಯಕ ರೈತರ ಮೇಲೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಪ್ರಕರಣ ದಾಖಲಿಸಿದೆ. ಸ್ವಾತಂತ್ರ್ಯ ಭಾರತದಲ್ಲಿ ಹಿಂದೆಂದೂ ಕಾಣದ ಭ್ರಷ್ಟ ಸರ್ಕಾರ ಯಾವುದಾದರೂ ಇದ್ದರೆ, ಅದು ಸಿದ್ದರಾಮಯ್ಯ ಅವರ ಸರ್ಕಾರ’ ಎಂದು ವಾಗ್ದಾಳಿ ನಡೆಸಿದರು.

‘ಕಾಂಗ್ರೆಸ್‌ನ ಕೆಲವು ಮುಖಂಡರು, ಸಚಿವರು, ಶಾಸಕರ ಮಕ್ಕಳು ಅಕ್ರಮ ಮರಳು ದಂದೆಯಲ್ಲಿ ಭಾಗಿಯಾಗಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ 24 ಗಂಟೆ
ಒಳಗೆ ಅಕ್ರಮ ಮರಳುಗಾರಿಕೆ ತಡೆಯುತ್ತೇವೆ. ದಂದೆಯಲ್ಲಿ ತೊಡಗಿದವರ ವಿರುದ್ಧ ದೂರು ದಾಖಲಿಸುತ್ತೇವೆ’ ಎಂದರು.

‘ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಭಾಗ್ಯಲಕ್ಷ್ಮೀ ಯೋಜನೆ ಜಾರಿಗೊಳಿಸಿ ಲಕ್ಷಾಂತರ ಹೆಣ್ಣುಮಕ್ಕಳಿಗೆ ಅನುಕೂಲ ಕಲ್ಪಿಸಲಾಗಿದೆ. ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ, ರೈತರ ಸಾಲಮನ್ನಾ, ಸೇರಿ ಹಲವು ಜನಪರ ಯೋಜನೆಗಳನ್ನು ಬಡವರಿಗೆ ತಲುಪಿಸಲಾಗಿದೆ. ಜನರು ಪ್ರಧಾನಿ ಮೋದಿ ಅವರ ಕೆಲಸಗಳನ್ನು ಮೆಚ್ಚಿದ್ದಾರೆ. ಕರ್ನಾ
ಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂದೇಹವಿಲ್ಲ’ ಎಂದರು.

‘ಬಿಜೆಪಿ ಸರ್ಕಾರದ ಯೋಜನೆಗಳಿಗೆ ಸಿದ್ದರಾಮಯ್ಯ ಭೂಮಿಪೂಜೆ ಮಾಡುತ್ತಿದ್ದಾರೆ. ಬಿಜೆಪಿ ಆಡಳಿತದಲ್ಲಿ 47 ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿತ್ತು. ಅದಕ್ಕೆ ಮೂರು ತಾಲ್ಲೂಕುಗಳನ್ನು ಸೇರಿಸಿ ಒಟ್ಟು 50 ಹೊಸ ತಾಲ್ಲೂಕುಗಳನ್ನು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಆದರೆ, ಈ ತಾಲ್ಲೂಕುಗಳಿಗೆ ಯಾವುದೇ ಅನುದಾನ ಇದುವರೆಗೂ ಬಿಡುಗಡೆ ಮಾಡಿಲ್ಲ.

ಉತ್ತರ ಕರ್ನಾಟಕವನ್ನು ಸಂಪೂರ್ಣ ಕಡೆಗಣಿಸಿರುವ ಅವರು ಈಗ ಜಾತಿಗಳ ಮಧ್ಯೆ ಜಗಳ ತಂದು ಜಾತಿ ರಾಜಕಾರಣ ಮಾಡುತ್ತಿದ್ದಾರೆ' ಎಂದು ದೂರಿದರು. ಮಾಜಿ ಸಚಿವ ಕಳಕಪ್ಪ ಬಂಡಿ ಮಾತನಾಡಿದರು. ಗೋವಿಂದ ಕಾರಜೋಳ, ಸಿ.ಟಿ.ರವಿ, ಮುರುಗೇಶ ನಿರಾಣಿ, ಲಕ್ಷ್ಮಣ ಸವದಿ, ಸಿ.ಎಂ.ಉದಾಸಿ, ಪಿ.ಸಿ.ಗದ್ದಿಗೌಡ್ರ, ಶಿವಕುಮಾರ ಉದಾಸಿ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ, ನಿಂಗಪ್ಪ ಕೆಂಗಾರ ಇದ್ದರು.

* * 

ಕಾಂಗ್ರೆಸ್‌ಗೆ ಗುಜರಾತ್‌, ಹಿಮಾಚಲಪ್ರದೇಶದಲ್ಲಿ ಮತದಾರರು ಪಾಠ ಕಲಿಸಿದ್ದಾರೆ. ಕರ್ನಾಟಕವನ್ನೂ ಕಾಂಗ್ರೆಸ್ ಮುಕ್ತವಾಗಿಸಲು ಶ್ರಮಿಸುತ್ತೇವೆ
ಬಿ.ಎಸ್. ಯಡಿಯೂರಪ್ಪ
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT