ರಾಯಚೂರು: ಒಳ ಮೀಸಲಾತಿ ಪರ ಹೋರಾಟ ನಡೆಸುತ್ತಿದ್ದ ಮಾದಿಗ ದಂಡೋರ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ಮಾದಿಗ ಅವರನ್ನು ಹೈದರಾಬಾದ್ ನಲ್ಲಿ ಬಂಧಿಸಲಾಗಿದ್ದು, ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಡಿಸೆಂಬರ್ 27 ರಂದು ಹೈದರಾಬಾದ್ ಕರ್ನಾಟಕ ಜಿಲ್ಲೆಗಳಲ್ಲಿ ಬಂದ್ ಆಚರಿಸಲಾಗುವುದು' ಎಂದು ಮಾದಿಗ ದಂಡೋರ ಸಮಿತಿ ಅಧ್ಯಕ್ಷ ಬಿ. ನರಸಪ್ಪ ದಂಡೋರ ಹೇಳಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಇಡೀ ಮಾದಿಗ ಸಮುದಾಯಕ್ಕೆ ವಂಚಿಸಿದ್ದಾರೆ. ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು.
ನವೆಂಬರ್ 6 ರಂದು ಹೋರಾಟ ಮಾಡುತ್ತಿರುವ ಸಂದರ್ಭದಲ್ಲಿ ರಾಷ್ಟ್ರೀಯ ಉಪಾಧ್ಯಕ್ಷೆ, ಹೋರಾಟಗಾರ್ತಿ ಭಾರತಿ ಮಾದಿಗ ಅವರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಪೊಲೀಸರ ತಳ್ಳಾಟದಲ್ಲಿ ಪ್ರಾಣವನ್ನೇ ತ್ಯಜಿಸಿದ್ದಾರೆ.
ಭಾರತಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ವೇಳೆ ಸಾವಿರಕ್ಕೂ ಅಧಿಕ ಜನರನ್ನು ಬಂಧಿಸಿರುವುದು ಖಂಡನೀಯ. ದಲಿತ ಸಂಘಟನೆ ಮುಖಂಡರು, ವ್ಯಾಪಾರಸ್ಥರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಬಂದ್ಬೆಂಬಲಿಸಬೇಕು ಎಂದು ತಿಳಿಸಿದರು.
ವಿಜಯಪುರದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವ ಕೊಲೆ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕೆಂದು ಒತ್ತಾಯಿಸಿದರು. ಆನಂದ ಏಗನೂರು, ಭೀಮರಾಯ, ಜೇಮ್ಸ್ ಗಧಾರ್, ನರಸಿಂಹಲು, ದೇವೇಂದ್ರ ಗುರ್ಜಾಪೂರು, ವೀರೇಶ ಜೇಗರಕಲ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.