ಕಲಬುರ್ಗಿ: ‘ಜಾತ್ಯತೀತರಿಗೆ ಅಪ್ಪ- ಅಮ್ಮ ಯಾರೆಂದು ಗೊತ್ತಿಲ್ಲ ಎಂದು ಹೇಳಿಕೆ ನೀಡಿರುವ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು' ಎಂದು ಆಳಂದ ಶಾಸಕ ಬಿ.ಆರ್.ಪಾಟೀಲ ತಿಳಿಸಿದರು.
‘ಈ ಸಂಬಂಧ ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಿದ್ದು, ಶೀಘ್ರದಲ್ಲಿಯೇ ಮೊಕದ್ದಮೆ ದಾಖಲು ಮಾಡಲಾಗುವುದು’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
‘ಸಚಿವರು ಸಂವಿಧಾನದ ಮೇಲೆ ಪ್ರಮಾಣ ಮಾಡಿ ಅಧಿಕಾರ ಸ್ವೀಕರಿಸಿದ್ದಾರೆ. ಆದರೆ, ಈಗ ಸಂವಿಧಾನ ಬದಲಾಯಿಸುವ ಮಾತು ಹೇಳುವ ಮೂಲಕ ಆ ಪ್ರತಿಜ್ಞಾವಿಧಿ ಉಲ್ಲಂಘಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಸೂಚನೆಯ ಮೇರೆಗೆ ಸಚಿವರು ಇಂಥ ಹೇಳಿಕೆಗಳನ್ನು ನೀಡುತ್ತಿದ್ದಾರೆ’ ಎಂದು ಆಪಾದಿಸಿದರು.
‘ಸಂವಿಧಾನದ ಆಶಯವನ್ನು ಬುಡಮೇಲು ಮಾಡಲು ಆರ್ಎಸ್ಎಸ್ ಹಿಂದಿನಿಂದಲೂ ಹುನ್ನಾರ ನಡೆಸುತ್ತಿದೆ. ಈ ಹುನ್ನಾರದ ಭಾಗವಾಗಿಯೇ ಸಚಿವರು ಸಲ್ಲದ ಹೇಳಿಕೆ ನೀಡಿದ್ದಾರೆ’ ಎಂದು ದೂರಿದರು.