ಕೊಪ್ಪಳ: ‘ಸಂವಿಧಾನವನ್ನು ಬದಲಾವಣೆ ಮಾಡಲು ಅನಂತಕುಮಾರ್ ಹೆಗಡೆ ಯಾರು’ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಪ್ರಶ್ನಿಸಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಸಚಿವರಾಗಿ ಸಂವಿಧಾನದ ಅಡಿಯಲ್ಲಿಯೇ ಪ್ರಮಾಣವಚನ ಸ್ವೀಕರಿಸಿ, ಈಗ ಸಂವಿಧಾನವನ್ನೇ ಬದಲಾಯಿಸುತ್ತೇವೆ ಎಂಬ ಅವರ ಹೇಳಿಕೆಯನ್ನು ಖಂಡಿಸುತ್ತೇನೆ. ಹೆಗಡೆ ಸಚಿವರಾಗಿ ಮುಂದುವರಿಯಲು ಅನರ್ಹರು’ ಎಂದು ಟೀಕಿಸಿದರು.
‘ಮನುವಾದವನ್ನು ಮತ್ತೆ ತರಲು ಹವಣಿಸಲಾಗುತ್ತಿದೆ. ಏನೇ ಮಾಡಿದರೂ ಸಂವಿಧಾನವನ್ನು ಯಾರೂ ಬದಲಾವಣೆ ಮಾಡಲು ಸಾಧ್ಯವಿಲ್ಲ’ ಎಂದರು.