ಕೂಡ್ಲಿಗಿ: ಕಾಂಗ್ರೆಸ್ ಪಕ್ಷ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದಲ್ಲದೆ, ಸ್ವಾತಂತ್ರ್ಯ ನಂತರವೂ ದೇಶದ ಅಭಿವೃದ್ಧಿಗೆ ಶ್ರಮಿಸುತ್ತ ಬಂದಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಟಿ. ಉಮೇಶ್ ಹೇಳಿದರು. ಅವರು ಪಟ್ಟಣದ ಸಮುದಾಯ ಭವನದಲ್ಲಿ ಗುರುವಾರ ಕೂಡ್ಲಿಗಿ ಬ್ಲಾಕ್ ಕಾಂಗ್ರೆಸ್ ಏರ್ಪಡಿಸಿದ್ದ ಪಕ್ಷದ 133ನೇ ಸಂಸ್ಥಾಪನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
‘ಸ್ವಾಂತತ್ರ್ಯ ಬಂದಾಗ ದೇಶದಲ್ಲಿ ಆರ್ಥಿಕ ಪರಿಸ್ಥಿತಿಯೂ ಸಮರ್ಪಕವಾಗಿದ್ದಿಲ್ಲ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ದೇಶದಲ್ಲಿ ಉತ್ತಮ ಆಡಳಿತ ನಡೆಸಿ ಅಭಿವೃದ್ಧಿ ಮಾಡುವ ಮೂಲಕ ಜಗತ್ತಿನಲ್ಲಿ ತನ್ನದೇ ಅದ ಸ್ಥಾನ ಕಂಡುಕೊಂಡಿತು’ ಎಂದು ಹೇಳಿದರು.
‘ರಾಜ್ಯದಲ್ಲಿ ಕಳೆದ ನಾಲ್ಕೂವರೆ ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷದ ಸರ್ಕಾರ ಜನರಿಗೆ ಅನೇಕ ಭಾಗ್ಯಗಳನ್ನು ನೀಡುವ ಮೂಲಕ ಉತ್ತಮ ಆಡಳಿತ ನಡೆಸಿದೆ. ಇದೇ ಅಭಿವೃದ್ಧಿಯನ್ನು ಮುಂದಿಟ್ಟುಕೊಂಡು ಮುಂದಿನ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಪಕ್ಷ ವನ್ನು ಮತ್ತೆ ಅಧಿಕಾರಿಕ್ಕೆ ತರಲು ಕಾರ್ಯ ಕರ್ತರು ಶ್ರಮಿಸಬೇಕು’ ಎಂದರು.
ಕಾಂಗ್ರೆಸ್ ಪಕ್ಷದ ಜಿಲ್ಲಾ ಗ್ರಾಮೀಣ ಘಟಕದ ಸೇವದಳದ ಅಧ್ಯಕ್ಷ ಮಾರೆಣ್ಣ ಮಾತನಾಡಿ, ‘ಕಾಂಗ್ರೆಸ್ ಪಕ್ಷದ ನಾಯಕರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ನೀಡಿದ್ದಾರೆ. ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ದೇಶದ ಸಂವಿಧಾನವನ್ನೇ ಬದಲಾಯಿಸಬೇಕು ಎಂದು ಹೇಳುವ ಮೂಲಕ ಸಂವಿಧಾನ ವಿರೋಧಿ ಮಾತಗಳನ್ನಾಡುತ್ತಿದ್ದಾರೆ. ಇಂತವರಿಂದ ಅಭಿವೃದ್ಧಿ ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೋಗಳಿ ಮಂಜುನಾಥ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ನೂರ್ ಆಹಮದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾನೂನು ಮತ್ತು ಮಾನವ ಹಕ್ಕುಗಳ ರಾಜ್ಯ ಘಟಕದ ಕಾರ್ಯದರ್ಶಿ ಟಿ.ಎಂ. ಸೋಮಯ್ಯ, ಅಲ್ಪ ಸಂಖ್ಯಾತರ ಘಟಕದ ತಾಲ್ಲೂಕು ಘಟಕದ ಅಧ್ಯಕ್ಷ ಎಂ. ನೂರಲ್ಲಾ, ಪಟ್ಟಣ ಪಂಚಾಯ್ತಿ ಸದಸ್ಯ ಟಿ. ವೆಂಕಟೇಶ್, ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಮಯೂರ್ ಮಂಜುನಾಥ್, ವಕ್ತಾರ ಕಾಟಮಲ್ಲಿ ಕೊಟ್ರೇಶ್, ಕಾರ್ಮಿಕ ಘಟಕದ ಅಧ್ಯಕ್ಷ ನಲ್ಲಮುತ್ತಿ ದುರುಗೇಶ, ಮುಖಂಡರಾದ ಕೃಷ್ನ ನಾಯ್ಕ್, ಭಾರ್ಗವ ಮಂಜುನಾಥ, ಉಮೇಶ್ ನಾಯ್ಕ್, ಸಿರಾಜ್, ಲಕ್ಷಿದೇವಿ, ಬಷೀರ್, ಪ್ರಶಾಂತ್ ಗೌಡ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.